ಚಿತ್ರದುರ್ಗ: ಕ್ರೀಡೆ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸಲಿದೆ. ಇದರಿಂದ ಆರೋಗ್ಯ ವೃದ್ಧಿಯಾಗಲಿದೆ. ಅಲ್ಲದೆ, ಮನಸ್ಸಿಗೆ ಉಲ್ಲಾಸ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮಾತನಾಡಿದರು.
ಸರ್ಕಾರಿ ನೌಕರರು ತಮ್ಮ ದೈನಂದಿನ ಒತ್ತಡದ ಕೆಲಸದ ಮಧ್ಯೆಯೂ ಕ್ರೀಡೆಯಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷದ ವಿಚಾರ. ಸೋಲು-ಗೆಲವು ಸಹಜ. ಆದರೆ, ಆಸಕ್ತಿಯಿಂದ ಪಾಲ್ಗೊಳ್ಳುವುದು ಬಹಳ ಮುಖ್ಯ ಎಂದು ಸಲಹೆ ನೀಡಿದರು.
ಒಪಿಎಸ್ ಜಾರಿಗೆ ಪರಿಶೀಲನೆ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ರಾಜ್ಯ ಸರ್ಕಾರ ಹೊಸ ಪಿಂಚಣಿ ಯೋಜನೆ ಬದಲು ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗೊಳಿಸುವ ಸಾಧ್ಯತೆ ಕುರಿತು ಪರಿಶೀಲಿಸುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ನೌಕರರ ಹಿತ ಕಾಪಾಡುವಲ್ಲಿ ಬದ್ಧವಾಗಿದೆ. ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ಮೂಲಕ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು. ನಿತ್ಯ ಸಾರ್ವಜನಿಕರ ಒಡನಾಟದಲ್ಲಿರುವ ಸರ್ಕಾರಿ ನೌಕರರಿಗೂ ಕ್ರೀಡಾಕೂಟ ಅಗತ್ಯವಿದೆ ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಹೊಸ ಟ್ರ್ಯಾಕ್, ಈಜುಕೊಳ ನವೀಕರಿಸಲಾಗಿದೆ. ವಾಲ್ ಕ್ಲೈಬಿಂಗ್ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಫುಟ್ಬಾಲ್ ಮೈದಾನ ಕಾಮಗಾರಿ ಪ್ರಗತಿಯಲ್ಲಿದೆ. ಕ್ರೀಡಾ ಹಾಗೂ ಉಸ್ತುವಾರಿ ಸಚಿವರು ತಲಾ 1 ಕೋಟಿ ರೂ. ಅನುದಾನ ನೀಡಿದ್ದು, ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇವೆ ಎಂದು ತಿಳಿಸಿದರು.
ಎಂಎಲ್ಸಿ ಕೆ.ಎಸ್.ನವೀನ್ ಮಾತನಾಡಿ, ಸರ್ಕಾರಿ ನೌಕರರು ಕ್ರೀಡೆಗಳಲ್ಲಿ ಹಾಗೂ ಸಾಂಸ್ಕೃತಿಕ ಕೌಶಲ ಪ್ರದರ್ಶಿಸಲು ಈ ಕ್ರೀಡಾಕೂಟ ಸಹಕಾರಿಯಾಗಿದೆ. ಚಿತ್ರದುರ್ಗ ಜಿಲ್ಲೆ ಮೊದಲಿನಿಂದಲೂ ಕ್ರೀಡೆಗೆ ಹೆಸರುವಾಸಿ. ಹೀಗಾಗಿ ಕೀರ್ತಿ ತರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಸಂಜೀವಿನಿ 21ಕ್ಕೆ ಜಾರಿ: ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಏ. 21ರ ಸರ್ಕಾರಿ ನೌಕರರ ದಿನಾಚರಣೆಯಂದು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಿದೆ. ಈ ಕುರಿತು ಸಿಎಂ ಈಗಾಗಲೇ ಆದೇಶ ಹೊರಡಿಸಿದ್ದಾರೆ ತಿಳಿಸಿದರು.
ಸರ್ಕಾರಿ ನೌಕರರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸ್ಯಾಲರಿ ಪ್ಯಾಕೇಜ್ ಅಕೌಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆ ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂ., ಅಂಗವಿಕಲತೆಗೆ ಒಳಗಾದರೆ 35 ಲಕ್ಷ ರೂ.ವರೆಗೂ ಪರಿಹಾರ ದೊರೆಯಲಿದೆ ಎಂದರು.
ಇದೇ ತಿಂಗಳಾಂತ್ಯಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪರ್ವೇಜ್ ಅವರ ನೇತೃತ್ವದ ಎನ್ಪಿಎಸ್ ಸಮಿತಿ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ನಂತರ ಸಿಎಂ ಮನವೊಲಿಸಿ, ಎನ್ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೆ ಪ್ರಯತ್ನಿಸುವುದಾಗಿ ಷಡಾಕ್ಷರಿ ಭರವಸೆ ನೀಡಿದರು. ಮೇ ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲೆಯ ನೌಕರ ಕ್ರೀಡಾಪಟುಗಳಿಗೆ ಸನ್ಮಾನಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮಾತನಾಡಿದರು. ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಎಸ್ಪಿ ರಂಜಿತ್ಕುಮಾರ್ ಬಂಡಾರು, ಎಸಿ ಮಹಿಬೂಬ್ ಜಿಲಾನಿ, ಕೂಡಾ ಅಧ್ಯಕ್ಷ ಎಂ.ಕೆ.ತಾಜ್ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ, ನೌಕರರು, ಸಂಘದ ಪದಾಧಿಕಾರಿಗಳಿದ್ದರು.