More

    ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಿ:ಶಾಸಕ ಎಚ್.ಡಿ ರೇವಣ್ಣ

    ಹಾಸನ: ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯದ ಕೊರತೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನಹರಿಸುವಂತೆ ಶಾಸಕ ಎಚ್.ಡಿ ರೇವಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ದುದ್ದ ಮತ್ತು ಶಾಂತಿಗ್ರಾಮ ಹೋಬಳಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಸಭೆ ನಡೆಸಿ ಶಾಸಕರು ಪ್ರತಿ ಇಲಾಖೆಗಳ ಅಧಿಕಾರಿಗಳಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದರು.
    ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪ್ರಾರಂಭಿಸಿರುವ ಜೆ.ಜೆ.ಎಂ ಕಾರ್ಯಗಳು ಮುಗಿದ ಮೇಲೆ ರಸ್ತೆಗಳು ಮತ್ತು ಇನ್ನಿತರ ಕಡೆಗಳಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚಿಸಲು ಸೂಚಿಸಿದರು.ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಕೊರತೆಯಾಗದಂತೆ ಎಚ್ಚರವಹಿಸಿ ಹಾಗೂ ಶೀಘ್ರವಾಗಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಕ್ರಮವಹಿಸುವಂತೆ ಹೇಳಿದರು.
    ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸರ್ಕಾರಿ ಶಾಲಾ ಕಾಲೇಜು ಆಸ್ತಿಗಳ ಸಂರಕ್ಷಣೆ ಮತ್ತು ಜಾಗವನ್ನು ಖಾತೆ ಮಾಡಲು ಮುಂದಾಗಬೇಕು.ವಿದ್ಯುತ್ ವೈರ್, ಟಿ.ಸಿ ದುರಸ್ತಿ ಸಮಸ್ಯೆಗಳು ಇರುವಂತಹ ಗ್ರಾಮ ಪಂಚಾಯಿತಿಗಳು ಪಟ್ಟಿ ಮಾಡಿ ಮಾಹಿತಿ ನೀಡುವಂತೆ ಸೂಚಿಸಿದರು.
    ಕೃಷಿ ಚಟುವಟಿಕೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ, ಮುಂಜಾಗ್ರತಾ ಕ್ರಮವಾಗಿ ರಸಗೊಬ್ಬರಗಳ ದಾಸ್ತಾನು ನೀಡುವಂತೆ ಕೃಷಿ ಅಧಿಕಾರಿಗಳಿಗೆ ತಿಳಿಸಿದರು.ಅರಣ್ಯ ಇಲಾಖೆಯವರು ಹೆಚ್ಚಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದರು.
    ನರೇಗಾ ಯೋಜನೆಯಡಿ ಶಾಲೆಗಳಿಗೆ ಆಟದ ಮೈದಾನ, ಕಾಪೌಂಡ್‌ಗಳನ್ನು ನಿರ್ಮಾಣ ಮಾಡಿ, ಗ್ರಾಮ ಲೆಕ್ಕಧಿಕಾರಿಗಳು ಹಿರಿಯ ನಾಗರಿಕರಿಗೆ ಸಕಾಲದಲ್ಲಿ ವೃದ್ಧಾಪ್ಯ ವೇತನ ಹಾಗೂ ಪಿಂಚಣಿಯನ್ನು ಅರ್ಹರಿಗೆ ತಲುಪಬೇಕು ಎಂದು ಹೇಳಿದರು.
    ಸಭೆಯಲ್ಲಿ ತಹಶೀಲ್ದಾರ್ ಶ್ವೇತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್, ಎ.ಡಿ.ಎಲ್.ಆರ್ ಅಧಿಕಾರಿ ಸಂಶುದ್ದೀನ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts