ಕುಶಾಲನಗರ: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಕುಶಾಲನಗರ ತಾಲೂಕು ಕೂಡ್ಲೂರು ಗ್ರಾಮದಲ್ಲಿ ಶನಿವಾರ ವಿಶ್ವ ಜಲ ದಿನವನ್ನು ಆಚರಿಸಲಾಯಿತು.
ಶಾಲಾ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಜಲದಿನದ ಮಹತ್ವ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಅತ್ಯಮೂಲ್ಯ ಸಂಪತ್ತಾದ ನೀರನ್ನು ಪೋಲು ಮಾಡದೇ ಮಿತವಾಗಿ ಬಳಸುವ ಮೂಲಕ ಮುಂದಿನ ಉತ್ತಮ ಭವಿಷ್ಯಕ್ಕಾಗಿ ನೀರನ್ನು ಉಳಿಸಿ ಸಂರಕ್ಷಿಸಲು ಪಣ ತೊಡಬೇಕು ಎಂದರು.
ನೀರಿನ ಅಭಾವ ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಸಂರಕ್ಷಣೆ ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ, ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆಯಾಗಿದೆ. ಅಮೂಲ್ಯವಾಗಿರುವ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ನೀರಿನ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಜಲ ಜೀವನ್ ಮಿಷನ್ ಯೋಜನಾ ವ್ಯವಸ್ಥಾಪಕ ಕೆ.ಪುಟ್ಟಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳುಸುವ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ. ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಜಲ ಜೀವನ್ ಮಿಷನ್ ಘಟಕದ ಜಿಲ್ಲಾ ಸಮನ್ವಯಾಧಿಕಾರಿ ಜಗ್ಗೇಶ್ ನೀರಿನ ಸದ್ಬಳಕೆ ಕುರಿತು ಮಾತನಾಡಿ, ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ನಾವು ಹೆಚ್ಚಿನ ಆದ್ಯತೆ ನೀಡುವ ಮೂಲಕ ನಾಳಿನ ಉತ್ತಮ ಭವಿಷ್ಯಕ್ಕಾಗಿ ನೀರಿನ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್ ನೀರಿನ ಸಂರಕ್ಷಣೆ ಕುರಿತ ಪೋಸ್ಟರ್ ಬಿಡುಗಡೆಗೊಳಿಸಿದರು. ಶಾಲೆಯ ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ, ವಿದ್ಯಾರ್ಥಿಗಳಿಗೆ ನೀರಿನ ಸಂರಕ್ಷಣೆ ಕುರಿತ ಘೋಷಣೆಗಳನ್ನು ಕೂಗಿದರು. ಎಸ್ಡಿಎಂಸಿ ಸದಸ್ಯೆ ಶೃತಿ, ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರತಿಜ್ಞಾ ವಿಧಿ ಸ್ವೀಕಾರ: ನಾನು ನನ್ನ ನಿತ್ಯ ಜೀವನದಲ್ಲಿ ನೀರನ್ನು ಪೋಲು (ಅಪವ್ಯಯ) ಮಾಡದೇ ನಾಳಿನ ಉತ್ತಮ ಭವಿಷ್ಯಕ್ಕಾಗಿ ಮಿತವಾಗಿ ಬಳುಸುವ ಮೂಲಕ ಜಲ ಸಂರಕ್ಷಣೆ ಮಾಡುತ್ತೇನೆ ಎಂದು ವಿದ್ಯಾರ್ಥಿಗಳು ಈ ವೇಳೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಹನಿ ಹನಿ ನೀರು ಉಳಿಸಿ, ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಜಲವೇ ಜೀವಜಾಲ, ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮುಂದಿನ ಉತ್ತಮ ಭವಿಷ್ಯಕ್ಕಾಗಿ ನೀರನ್ನು ಸಂರಕ್ಷಿಸೋಣ ಬನ್ನಿ ಎಂಬಿತ್ಯಾದಿ ಭಿತ್ತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.