ಚಿತ್ರದುರ್ಗ: ಜಿಲ್ಲೆಯಲ್ಲೂ ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ, ಪೋಕ್ಸೋ ಪ್ರಕರಣ ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರೋಣ ವಾಸುದೇವ್ ಸಲಹೆ ನೀಡಿದರು.
ಜಿಲ್ಲಾ ನ್ಯಾಯಾಲಯ ಆವರಣದ ಮಧ್ಯಸ್ಥಿಕೆ ಕೇಂದ್ರದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ-2024ರ ಅಡಿಯಲ್ಲಿ ರಚಿಸಲಾದ ಮಕ್ಕಳ ಕಾನೂನು ಸೇವೆಗಳ ಘಟಕದ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಅಭಿಶಿಕ್ಷಣ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವೆಂಬುದನ್ನು ಗ್ರಾಮೀಣ ಭಾಗಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ತಡೆಯಲು ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಮಾತನಾಡಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಇಲ್ಲಿಯೂ ಘಟಕಕ್ಕೆ ಸದಸ್ಯರನ್ನು ನೇಮಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ, ಸಖಿ, ಪ್ಯಾನಲ್ ವಕೀಲರು, ಅರೆಕಾಲಿಕ ಸ್ವಯಂ ಸೇವಕರು ಸೇರಿ ಕ್ಷೇತ್ರ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುವವರಿಗೆ ಕೆಲವು ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.
ಯಾವ ಮಗುವೂ ಹಕ್ಕಿನಿಂದ ವಂಚಿತ ಆಗಬಾರದೆಂಬ ಉದ್ದೇಶ ಘಟಕದ್ದಾಗಿದೆ. ನ್ಯಾಯಾಲಯ, ಅದರಿಂದಾಚೆಗೂ ಎಲ್ಲ ಹಂತದಲ್ಲಿಯೂ ಮಕ್ಕಳಿಗೆ ಕಾನೂನು ಸೇವೆ ಒದಗಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ನಿವೃತ್ತ ಜಿಲ್ಲಾ ನ್ಯಾಯಾಧೀಶ ನಾಡಿಗ ಜಯಸ್ವಾಮಿ ಮಾತನಾಡಿ, ಪ್ರಾಧಿಕಾರದಿಂದ ಉಚಿತವಾಗಿ ಅರ್ಹರಿಗೆ ಕಾನೂನಿನ ನೆರವು ನೀಡಲಾಗುತ್ತಿದೆ. ಏಳ್ಹೆಂಟು ಕಾನೂನುಗಳು ಮಕ್ಕಳ ಪರವಿದ್ದು, ಈ ಕುರಿತು ಮಕ್ಕಳು, ಪಾಲಕರಲ್ಲಿ ಜಾಗೃತಿ ಮೂಡಿಸಬೇಕು. ಉಲ್ಲಂಘನೆಯಾದಲ್ಲಿ ತುರ್ತಾಗಿ ನೆರವಿಗೆ ಧಾವಿಸಿ ನ್ಯಾಯ ಕೊಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಇತರರಿದ್ದರು.