ಧಾರವಾಡ: ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಬಾಲ್ಯ ವಿವಾಹಗಳ ವರದಿಯಾಗುತ್ತಿವೆ. ಗ್ರಾಮ ಮಟ್ಟದ ಸಮಿತಿಗಳಲ್ಲಿ ಈ ಕುರಿತು ರ್ಚಚಿಸಿ, ಜನರಲ್ಲಿ ಅರಿವು ಮೂಡಿಸುವ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಗರದ ಆಲೂರು ವೆಂಕಟರಾವ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಬೆಳಗಾವಿ ವಿಭಾಗೀಯ ಮಟ್ಟದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ ಕಾಯ್ದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ಎಂಬ ಪಿಡುಗು ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಇದೆ. ಎಲ್ಲ ಇಲಾಖೆಗಳು ಕ್ರಿಯಾಶೀಲರಾಗಿ ಕಾರ್ಯಪ್ರವೃತ್ತರಾದರೆ ಮಾತ್ರ ಬಾಲ್ಯ ವಿವಾಹದಂಥ ಸಾಮಾಜಿಕ ಪಿಡುಗನ್ನು ತೊಲಗಿಸಲು ಸಾಧ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಚಿನ್ನಣ್ಣವರ ಆರ್.ಎಸ್. ಮಾತನಾಡಿ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾನೂನು ಸೇವೆಗಳ ಪ್ರಾಧಿಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದರು. ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ ಅವರು ಬಾಲ್ಯವಿವಾಹ ನಿಷೇಧ ಕುರಿತ ಭಿತ್ತಿಪತ್ರಗಳನ್ನು ಅನಾವರಣಗೊಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಕೆ.ಎಂ. ರೇವತಿ, ಉಪ ನಿರ್ದೇಶಕಿ ಹಲೀಮಾ ಕೆ. ಹಾಗೂ ಯುನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ಡಿವೈಎಸ್ಪಿ ರವಿ ನಾಯ್ಕ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರ ನಡೆಸಿಕೊಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಸಿ. ಶೆಟ್ಟರ್ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ.ಎಚ್. ಲಲಿತಾ ನಿರೂಪಿಸಿದರು. ಜಿಲ್ಲಾ ನಿರೂಪಣಾಧಿಕಾರಿ ಎನ್.ಎ. ಪುಟ್ಟಪ್ಪನವರ ವಂದಿಸಿದರು.