
ಚಿಕ್ಕಮಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಎಲ್ಲಾ ತನಿಖಾ ಸಂಸ್ಥೆಗಳನ್ನು ಮನಸ್ಸಿಗೆ ಬಂದಂತೆ ಬಳಸುತ್ತಿದೆ. ಈ ಮೂಲಕ ವಿರೋಧಪಕ್ಷಗಳನ್ನು ಹೆದರಿಸಲು ನೋಡುತ್ತಿದೆ ಆದರೆ ಇಲ್ಲಿ ಹೆದರುವವರು ಯಾರು ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಪ್ರಚಾರ ಪಡೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧಡೆ ಇಡಿ ದಾಳಿ ನಡೆಸಿದೆ. ನಮ್ಮ ಶಾಸಕರು ಅವರ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅವರ ಎಲ್ಲಾ ರೀತಿಯ ತನಿಕೆಗೂ ನಾವು ಸಹಕಾರ ನೀಡುತ್ತೇವೆ ಎಂದರು.
ಕಾಂಗ್ರೆಸ್ ನಾಯಕ ಭರತ್ ರೆಡ್ಡಿ ಮನೆಯಲ್ಲಿ ಸಿಕ್ಕಿರುವ ಕೈಬರಹದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಪತ್ರ ಸೃಷ್ಟಿ ಮಾಡುವಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಹೇಳಿದರು.
ಹೈಕಮಾಂಡ್ ನೊಂದಿಗೆ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯದ ಕಾಂಗ್ರೆಸ್ ಮುಖಂಡರ ಚರ್ಚೆ ಬಾಕಿ ಉಳಿದಿತ್ತು. ಹೀಗಾಗಿ ನಿನ್ನ ಆ ಚರ್ಚೆ ನಡೆದಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರೇ ಸ್ಪಷ್ಟನೆ ನೀಡಿದ್ದಾರೆ. ಇದೆ ವೇಳೆ ಹೈಕಮಾಂಡ್ ಜಾತಿ ಗಣತಿ ಬಗ್ಗೆಯೂ ಸಲಹೆ ನೀಡಿದ್ದಾರೆ. ಇದರ ಬಗ್ಗೆ ಗುರುವಾರ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯಲಿದೆ ಎಂದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿ ಹಾಗೂ ಜನಪರವಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ಯಾರಂಟಿ ಅನುಷ್ಠಾನದಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಭದ್ರ ಕಾಡಾ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮತ್ತಿತರರಿದ್ದರು.
ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಭೇಟಿ
ಬಾಳೆಹೊನ್ನೂರು ರಂಭಾಪುರಿ ಶ್ರೀಗಳನ್ನು ಭೇಟಿ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಅವರು ಶ್ರೀಗಳೊಂದಿಗೆ ಜಾತಿ ಗಣತಿ ಬಗ್ಗೆಯೂ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಗುರುಗಳನ್ನು ಭೇಟಿ ಮಾಡಿದ ವೇಳೆ ಅವರೊಂದಿಗೆ ಜಾತಿಗಣತಿ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಜಾತಿ ಗಣತಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಸಲಹೆ ಒಳ್ಳೆಯ ಬೆಳವಣಿಗೆ ಎಂದು ಶ್ರೀಗಳು ತಿಳಿಸಿದ್ದಾರೆ ಎಂದರು.