
ಪಾಂಡವಪುರ: ಶಾಸಕ ಮತ್ತು ಸಚಿವನಾಗಿದ್ದಾಗ ಕ್ಷೇತ್ರದ ಜನರು ಮತ್ತು ರೈತರ ಋಣ ತೀರಿಸುವ ಜವಾಬ್ದಾರಿ ನಿಭಾಯಿಸಿದ್ದೇನೆ. ಮುಂದೆಯೂ ಜನರ ನಡುವೆ ಇದ್ದುಕೊಂಡು ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಮನ್ಮುಲ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿ ಸಿ.ಶಿವಕುಮಾರ್ ಪರವಾಗಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಡೇರಿ ಅಭಿವೃದ್ಧಿಗೆ ಶಾಸಕರ ಅನುದಾನ ನೀಡಲು ಅವಕಾಶವಿರಲಿಲ್ಲ. ಸಿಎಂ ಆಗಿದ್ದ ಕುಮಾರಸ್ವಾಮಿ ಅವರ ಮನವೊಲಿಸಿ ಡೇರಿಗಳ ಅಭಿವೃದ್ಧಿಗೆ ಶಾಸಕರ ಅನುದಾನ ನೀಡಲು ಅನುಮತಿ ಪಡೆಯಲಾಯಿತು. ಹೈನುಗಾರಿಕೆಗೆ ಉತ್ತೇಜನ ನೀಡುವ ಕೆಲಸ ಮಾಡಿದ್ದೇನೆ.
ಎಚ್.ಡಿ.ಕುಮಾರಸ್ವಾಮಿ-ಯಡಿಯೂರಪ್ಪ ಅವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೈನುಗಾರಿಕೆ ಉತ್ತೇಜಿಸುವ ನಿಟ್ಟಿನಲ್ಲಿ ಹಾಲಿಗೆ ಪ್ರೋತ್ಸಾಹ ಧನ ನೀಡಲು ಆರಂಭಿಸಲಾಯಿತು. ನಮ್ಮ ಸರ್ಕಾರದ ಅವಧಿಯಲ್ಲಿ ಹಾಲಿನ ಪ್ರೋತ್ಸಾಹ ಧನ ಪ್ರತಿ ತಿಂಗಳು ಬಿಡುಗಡೆಯಾಗುತ್ತಿತ್ತು. ಆದರೆ ಈ ಸರ್ಕಾರಕ್ಕೆ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲು ಹಣವಿಲ್ಲದಂತಹ ಪರಿಸ್ಥಿತಿ ಬಂದಿದೆ. 6 ತಿಂಗಳು ಕಳೆದರೂ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಈ ಸರ್ಕಾರಕ್ಕೆ ರೈತರ ಬಳಿಯೇ ಕಿತ್ತುಕೊಂಡು ತಿನ್ನುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಮನ್ಮುಲ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡಿರುವ ವ್ಯಕ್ತಿ ಹಿಂದೆ ನಮ್ಮ ಬಳಿ ಇದ್ದಾಗ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ವಿರೋಧದ ನಡುವೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದ್ದೆ. ಗೆದ್ದು ಪಕ್ಷಕ್ಕೆ ದ್ರೋಹ ಬಗೆದು ಹೋಗಿದ್ದಾರೆ. ಇದೀಗ ಧರ್ಮ ಯುದ್ಧದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರೈತಸಂಘ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿರುದ್ಧ ಕಿಡಿಕಾರಿದರು.
ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಎದುರಾಳಿ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಆಣೆ ಪ್ರಮಾಣ ಮಾಡುವ ಮೂಲಕ ಸುಳ್ಳು ಭರವಸೆ ನೀಡುತ್ತಾರೆ. ಅಂತಹ ವ್ಯಕ್ತಿಗಳಿಗೆ ಮಣೆ ಹಾಕಬೇಡಿ. ಸಿ.ಎಸ್.ಪುಟ್ಟರಾಜು ಅವರು ಚುನಾವಣೆಯಲ್ಲಿ ಸೋತರೂ ಕ್ಷೇತ್ರದ ಜನತೆಯ ಕಷ್ಟ, ಸುಖಗಳಲ್ಲಿ ಭಾಗವಹಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಡಿತ ಸಾಧಿಸಿದರೆ ಮುಂದೆ ದೊಡ್ಡ ಚುನಾವಣೆಗಳನ್ನು ಎದುರಿಸಲು ಸಹಕಾರಿಯಾಗುತ್ತವೆ. ಎನ್ಡಿಎ ಬೆಂಬಲಿತ ಮೈತ್ರಿ ಅಭ್ಯರ್ಥಿ ಸಿ.ಶಿವಕುಮಾರ್ ಅವರು ಚುನಾವಣೆಯಲ್ಲಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗುರುಸ್ವಾಮಿ, ನಂಜೇಗೌಡ, ರಾಧಕೃಷ್ಣ, ಆನಂದ್, ಸುಶೀಲಮ್ಮ, ಮನ್ಮುಲ್ ಮಾಜಿ ನಿರ್ದೇಶಕ ಜಿ.ಇ.ರವಿಕುಮಾರ್, ಗಿರೀಗೌಡ, ಸ್ವಾಮೀಗೌಡ ಇತರರು ಇದ್ದರು.