ಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾಗಿ ಘೋಷಿಸುವ ಮೊದಲು ಕುಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮಹದೇಶ್ವರ ಬೆಟ್ಟದಲ್ಲಿ ಹಸಿರು ಸೇನೆ, ರೈತ ಸಂಘ, ಜೇನುಗೂಡು ಮಹಿಳಾ ಸ್ವ ಸಹಾಯ ಸಂಘಟಣೆ ಪದಾಧಿಕಾರಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಮ.ಬೆಟ್ಟದ ಬೊಮ್ಮೇಶ್ವರ ದೇವಸ್ಥಾನದಿಂದ ಪ್ರತಿಭಟನೆ ಹೊರಟ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಶ್ರೀ ಮಹದೇಶ್ವರ ದೇಗುಲ, ಹಳೇ ಬ್ಯಾಂಕ್ ವೃತ್ತ ಹಾಗೂ ಬಸ್ ನಿಲ್ದಾಣದ ಮೂಲಕ ಕೊಳ್ಳೇಗಾಲದ ಕಡೆಗೆ ತೆರಳುವ ರಸ್ತೆಯ ಟೋಲ್ಗೇಟ್ನಲ್ಲಿ ಪ್ರತಿಭಟನೆ ನಡೆಸಿದರು.
ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಮಲೆಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕುಗ್ರಾಮಗಳಲ್ಲಿ ಹಲವು ದಶಕಗಳಿಂದ ಜನರು ವಾಸಿಸುತ್ತಿದ್ದಾರೆ. ಆದರೆ ಸಮಪರ್ಕ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಇಲ್ಲಿನ ಜನರಿಗೆ ಮೂಲ ಸೌಕರ್ಯ ಮರಿಚಿಕೆಯಾಗಿದೆ. ಹೀಗಿರುವಾಗ ಸರ್ಕಾರ ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾಗಿ ಘೋಷಿಸಲು ನಿರ್ಧರಿಸಿರುವುದು ಎಷ್ಟರ ಮಟ್ಟಿಗೆ ಸರಿ. ಇದರಿಂದ ಜನರಿಗೆ ತುಂಬಾ ಅನಾನೂಕೂಲವಾಗಲಿದೆ. ಆದ್ದರಿಂದ ಈ ಯೋಜನೆಯನ್ನು ಘೋಷಿಸುವ ಮೊದಲು ಕುಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಜತೆಗೆ ರೈತರ ಸಭೆ ಕರೆದು ಚರ್ಚಿಸಬೇಕು. ಇಲ್ಲವಾದಲ್ಲಿ ಮ.ಬೆಟ್ಟಕ್ಕೆ ಆಗಮಿಸುವ ಮುಖ್ಯಮಂತ್ರಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಪ್ರತಿಭಟನಕಾರರು ಮಾತನಾಡಿ, ಈ ಭಾಗದ ಕುಗ್ರಾಮಗಳಲ್ಲಿ ಅಳವಡಿಸಿರುವ ಸೋಲಾರ್ ವಿದ್ಯುತ್ ಘಟಕ ದುರಸ್ತಿಗೊಂಡಿದ್ದು, ತುಂಬಾ ತೊಂದರೆಯಾಗಿದೆ. ಹಾಗಾಗಿ ಘಟಕವನ್ನು ರಿಪೇರಿ ಮಾಡುವುದರ ಮೂಲಕ ವಿದ್ಯುತ್ ಸೌಕರ್ಯ ಕಲ್ಪಿಸಬೇಕು. ಸರ್ವೇ ನಂಬರ್ 124ರಲ್ಲಿ ಭೂಮಿಯನ್ನು ಪೋಡಿ ಮಾಡಿ ರೈತರಿಗೆ ಪಹಣಿ ನಿಡಬೇಕು. ಜನರಿಗೆ ಸಮರ್ಪಕ ಆರೋಗ್ಯ ಸೇವೆಯನ್ನು ಒದಗಿಸಬೇಕು. ಅಲ್ಲದೆ ಚಂಗಡಿ ಗ್ರಾಮಕ್ಕೆ ಶೀಘ್ರ ಪುನರ್ವಸತಿ ಕಲ್ಪಿಸಬೇಕು. ಜನವನ ಸೇತುವೆ ವಾಹನ ಸೌಕರ್ಯ ಕಲ್ಪಿಸಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಪಟ್ಟು ಹಿಡಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಅವರ ಮುಂದೆ ಪ್ರತಿಭಟನಕಾರರು ಮಾತನಾಡಿ, ಮ.ಬೆಟ್ಟದ ಆಸ್ಪತ್ರೆಯಲ್ಲಿ ಸಮರ್ಪಕ ಆರೋಗ್ಯ ಸೇವೆ ಸಿಗದ ಹಿನೆಲೆಯಲ್ಲಿ ಜನರು ತಮಿಳುನಾಡಿನ ಆಸ್ಪತ್ರೆ ಅವಲಂಬಿಸಬೇಕಾದ ಸ್ಥಿತಿ ಇದೆ. ಇದರಿಂದ ತುಂಬಾ ತೊಂದರೆ ಎದುರಿಸುತ್ತಿದ್ದೇವೆ. ಅಲ್ಲದೆ ಭಕ್ತರಿಗೂ ಅನಾನೂಕೂಲವಾಗುತ್ತಿದೆ. ಆದ್ದರಿಂದ ಆಸ್ಪತ್ರೆಯನ್ನು ಮೇಲ್ದರ್ಗೇರಿಸುವಂತೆ ಒತ್ತಾಯಿಸಿದರು. ಇದಕ್ಕೆ ಡಿಎಚ್ಒ ಪ್ರತಿಕ್ರಿಯಿಸಿ ಸಮುದಾಯ ಆಸ್ಪತ್ರೆ ನಿರ್ಮಾಣಕ್ಕೆ ಪ್ರಾಧಿಕಾರ ಸ್ಥಳ ಗುರ್ತಿಸಲಾಗಿದೆ. ಅನುಮೋದನೆ ದೊರೆತ ಬಳಿಕ ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಎಇಇ ಪ್ರಕಾಶ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಶಾಶ್ವತ ವಿದ್ಯುತ್ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅರಣ್ಯ ಇಲಾಖೆಯಿಂದ ಅನುಮತಿ ದೊರೆತ ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು. ಈ ವೇಳೆ ಹಕ್ಕೋತ್ತಾಯದ ಪ್ರತಿಯನ್ನು ಎಸಿಎಫ್ ನಂದಗೋಪಾಲ್ ಅವರಿಗೆ ನೀಡಲಾಯಿತು.
ಫೋಟೋ
16 ಹನೂರು 2 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮಹದೇಶ್ವರ ಬೆಟ್ಟದಲ್ಲಿ ಹಸಿರು ಸೇನೆ ಹಾಗೂ ರೈತ ಸಂಘ, ಜೇನುಗೂಡು ಮಹಿಳಾ ಸ್ವ ಸಹಾಯ ಸಂಘಟಣೆ ಪದಾಧಿಕಾರಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.