ಕೋಲಾರ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಸೌಹರ್ದಯುತವಾಗಿದ್ದರೆ ದೇಶವು ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಣೆ ಮಾಡೋಣ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸುವ ಬಗ್ಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಆಯಾ ಪೊಲೀಸ್ ಠಾಣೆಯಲ್ಲಿ ಏಕಗವಾಕ್ಷಿ ವ್ಯವಸ್ಥೆಯಡಿ ಅನುಮತಿ ಪಡೆಯಬೇಕು. ಈ ಹಿಂದಿನ ಹಳೆಯ ಪದ್ಧತಿ, ನಿಯಮ ಅನುಸರಿಸಿ ಶಾಂತಿಯುತವಾಗಿ ಆಚರಿಸಬೇಕು. ಹೊಸದಾಗಿ ಸೂಕ್ಷ್ಮಯುತವಾದ ಪ್ರದೇಶಗಳಲ್ಲಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗೆ ಅವಕಾಶವಿರುವುದಿಲ್ಲ ಹಾಗೂ ಪಿಓಪಿ ಮತ್ತು ಬಣ್ಣದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸಿವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದು ತಿಳಿಸಿದರು.
ಗಣೇಶ ಮತ್ತು ಈದ್ ಮಿಲಾದ್ ಹಬ್ಬವನ್ನು ಇಲಾಖೆಯಿಂದ ನೀಡಲಾಗುವ ಸೂಚನೆಗಳನ್ನು ನಿರ್ಬಂಧ ಎಂದುಕೊಳ್ಳದೆ ಎಲ್ಲರೂ ಕಾನೂನನ್ನು ಗೌರವಿಸಿ ನಮ್ಮ ಇಲಾಖೆಯಿಂದಲೂ ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮಾತನಾಡಿ, ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಬೆಳಕು ಹಾಗೂ ಸಿಸಿಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕೆ ಆಯೋಜಕರೇ ಸಂಪೂರ್ಣ ಹೊಣೆ ಆಗಿರುತ್ತಾರೆ. ಅಹಿತಕರ ಘಟನೆಗಳು ನಡೆದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಬೇಕು. ಹಬ್ಬದ ಆಚರಣೆಗಳಲ್ಲಿ ಪ್ರಚೋದನಾಕಾರಿ ಹೇಳಿಕೆ, ಅಸಭ್ಯ ವರ್ತನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. .
ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಮಾತನಾಡಿ, ಯಾವುದೇ ವಿದ್ಯುತ್ ಅವಘಡಗಳು ನಡೆಯದಂತೆ ಕ್ರಮವಹಿಸಬೇಕು. ಕಡಿಮೆ ಎತ್ತರದ ಮೂರ್ತಿಗಳು, ಅನಾಹುತಕ್ಕೆ ಎಡೆ ಮಾಡಿಕೊಡದ ಅಲಂಕಾರ ಹಾಗೂ ಸಣ್ಣ ಗೋಪುರಗಳ ನಿರ್ಮಾಣ ಮಾಡಬೇಕು. ಧ್ವನಿವರ್ಧಕಗಳಿಗೆ ನಿಗದಿತ ಸಮಯದಲ್ಲಿ ಮಾತ್ರ ಅನುಮತಿ ನೀಡಲಾಗುತ್ತದೆ. ಹಬ್ಬಗಳ ಆಚರಣೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಆಚರಣೆಗೆ ಬಲವಂತವಾಗಿ ದೇಣಿಗೆ ಸಂಗ್ರಹಿಸಬಾರದು ಎಂದು ಸೂಚನೆ ನೀಡಿದರು.
ನಗರಸಭೆ ಆಯುಕ್ತ ಶಿವಾನಂದ್ ಅವರು ಮಾತನಾಡಿ, ಗಣಪತಿ ವಿಸರ್ಜನೆಗೆ ಆಯ್ದ ಸ್ಥಳಗಳನ್ನು ಗುರುತಿಸಲಾಗುತ್ತದೆ. ಅಂತಹ ಸ್ಥಳಗಳಲ್ಲಿ ಗಣೇಶನನ್ನು ವಿಸರ್ಜನೆ ಮಾಡಿ ಎಂದು ತಿಳಿಸಿದರು.
ಕೋಲಾರ ಡಿವೈಎಸ್ಪಿ ಮಲ್ಲೇಶ್, ಕೆಜಿಎಫ್ ಡಿವೈಎಸ್ಪಿ ರಮೇಶ್, ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸೌಹಾರ್ಧಯುತವಾಗಿರಲಿ ಹಬ್ಬದ ಆಚರಣೆ
ಕೋಲಾರದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸಭೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ನಗರಸಭೆ ಆಯುಕ್ತ ಶಿವಾನಂದ್ ಇತರರು ಇದ್ದರು.