More

    ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

    ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ ವಿ.ಎಸ್. ಬಸವರಾಜ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು, ಅಂಗವಿಕಲರ ಅಭಿವೃದ್ಧಿಗೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. 21 ಬಗೆಯ ವಿಕಲತೆಗಳಿವೆ, ಅವುಗಳನ್ನು ಗುರುತಿಸಬೇಕು. ಮೊದಲ ಹಂತದಲ್ಲಿ ಅಂಗವಿಕಲ ಮಕ್ಕಳನ್ನು ಸೊನ್ನೆಯಿಂದ 5 ವರ್ಷದೊಳಗೆ ಗುರುತಿಸಿ, ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವ ಕೆಲಸವಾಗಬೇಕು. ಶಿಕ್ಷಣ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

    ಶಾಲೆಯಿಂದ ಹೊರಗುಳಿದ ಅಂಗವಿಕಲ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆತರಬೇಕು. ವಾಹನ, ಚೇರ್ ವಿತರಣೆ ಮಾಡಿದರೆ ಸಾಲದು. ಅವರಿಗೆ ಬದುಕು ಕಟ್ಟಿಕೊಡುವ ಕೆಲಸವಾಗಬೇಕು. ಮನೆ ಹಂಚಿಕೆಯಲ್ಲಿ ಅಂಗವಿಕಲ ವ್ಯಕ್ತಿಯೊಂದಿಗೆ ಅವರ ಕುಟುಂಬದ ಸದಸ್ಯರನ್ನು ಜಂಟಿಯಾಗಿ ನೋಂದಣಿ ಮಾಡಬೇಕು ಎಂದರು.

    ಶಿಕ್ಷಣ, ಆರೋಗ್ಯ ಸೇವೆ, ಮನೆ, ಶೌಚಗೃಹ ಸೇವೆಗಳನ್ನು ಸಮರ್ಪಕವಾಗಿ ಒದಗಿಸಬೇಕು. ಕೆಲವು ಯೋಜನೆಗಳ ಪ್ರಯೋಜನ ಪಡೆಯಲು ಅಂಗವಿಕಲರು ಅಶಕ್ತರಾಗಿದ್ದರೆ ಅವರ ಕುಟುಂಬಗಳನ್ನು ಪರಿಗಣಿಸಿ ಎಂದರು.

    ಮಾನಸಿಕ ಅಸ್ವಸ್ಥ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿ ನಡೆಯುತ್ತಿದೆ. ಈ ಕುರಿತು ಪೊಲೀಸ್ ಇಲಾಖೆ ಹೆಚ್ಚಿನ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸ್ ಠಾಣೆಗೆ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ನ್ಯಾಯ ಕೊಡಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಎಪಿಡಿ ನಿರ್ದೇಶಕ ಶಿವು ಹಿರೇಮಠ, ಸಹಾಯಕ ಆಯುಕ್ತ ಪದ್ಮನಾಭ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಎ. ಜಮಖಾನೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ. ರಾಜು ಕೂಲೇರ ಇತರ ಅಧಿಕಾರಿಗಳು ಹಾಜರಿದ್ದರು.

    ಕರ್ತವ್ಯಕ್ಕಿಂತ ಮಾನವೀಯತೆ ದೊಡ್ಡದು

    ಬುದ್ಧಿಮಾಂದ್ಯರು ಹಾಗೂ ಹಿರಿಯ ನಾಗರಿಕರನ್ನು ದೇವಸ್ಥಾನಗಳಲ್ಲಿ, ಇತರೆ ಕಡೆಗಳಲ್ಲಿ ಬಿಟ್ಟು ಹೋಗುತ್ತಾರೆ. ಅಂತಹ ಕಡೆಗಳಲ್ಲಿ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅಂಗವಿಕಲರ ಸಮಸ್ಯೆ, ದೂರುಗಳ ನಿರ್ವಹಣೆಗೆ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ವಿಶೇಷ ವಕೀಲರನ್ನು ನೇಮಿಸಲಾಗಿದೆ. 2016ರ ಕಾನೂನಿನ ಬಗ್ಗೆ ಎಲ್ಲರೂ ತಿಳಿದುಕೊಳ್ಳಿ. ನಿಮ್ಮ ಸಿಬ್ಬಂದಿಗೆ ತರಬೇತಿ ನೀಡಿ. ಕರ್ತವ್ಯಕ್ಕಿಂತ ಮಾನವೀಯತೆ ದೊಡ್ಡದು. ಅಂಗವಿಕಲರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲರೂ ಕಾಳಜಿ, ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು. ಕೃಷಿ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ, ನಗರಸಭೆ ಇತರೆ ಇಲಾಖೆಗಳು, ವಿವಿಧ ನಿಗಮಗಳಲ್ಲಿ ಶೇ. 5ರ ಅನುದಾನದಲ್ಲಿ ಅಂಗವಿಕಲರಿಗೆ ಆದ್ಯತೆ ನೀಡಬೇಕು ಆಯುಕ್ತ ವಿ.ಎಸ್. ಬಸವರಾಜ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts