ನರಗುಂದ: ಪಟ್ಟಣ ಸೇರಿ ತಾಲೂಕಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಸ್ ನಿಯಂತ್ರಿಸಲು ಪಟ್ಟಣದ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ತುರ್ತು ಸಭೆ ನಡೆಸಿ, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಕಿರಾಣಿ, ತರಕಾರಿ ಅಂಗಡಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜನರು ಅನಗತ್ಯವಾಗಿ ಗುಂಪು ಗೂಡುವುದನ್ನು ತಡೆಯಬೇಕು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಿ ಕ್ರಮ ಕೈಗೊಳ್ಳಬೇಕು. ಪುರಸಭೆಯಿಂದ ಪ್ರತಿಯೊಂದು ವಾರ್ಡ್ಗಳಲ್ಲಿ ಸ್ವಚ್ಛತೆ ಕಾರ್ಯ ಸಮಯಕ್ಕೆ ಸರಿಯಾಗಿ ನಡೆಸಬೇಕು ಎಂದರು.
ಸರ್ಕಾರದ ನಿಯಮದಂತೆ ನಿತ್ಯ ಸಮಯಕ್ಕೆ ಸರಿಯಾಗಿ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಬೇಕು. ಕಂಟೇನ್ಮೆಂಟ್ ಜೋನ್ ಪ್ರದೇಶದ ಜನರಿಗೆ ಮೂಲಸೌಲಭ್ಯ ಹಾಗೂ ಆರೋಗ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ತಹಸೀಲ್ದಾರ್ ಎ.ಎಚ್. ಮಹೇಂದ್ರ, ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಡಿ.ಬಿ. ಪಾಟೀಲ, ಆರೋಗ್ಯಾಧಿಕಾರಿ ರೇಣುಕಾ ಕೊರವನವರ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಬ್ಯಾಳಿ, ತಾಪಂ ಇಒ ಚಂದ್ರಶೇಖರ ಕುರ್ತಕೋಟಿ, ಡಾ. ಪ್ರವೀಣ ಮೇಟಿ, ಇತರರಿದ್ದರು.