ಆಲೂರು: ತಾಲೂಕಿನ ಜನತೆಯ ಬಹುದಿನದ ಕನಸಾಗಿದ್ದ ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.
ಪಟ್ಟಣದ ಬಿಕ್ಕೋಡು ರಸ್ತೆಯಲ್ಲಿರುವ ನ್ಯಾಯಾಲಯದ ಪಕ್ಕದಲ್ಲಿರುವ ಸರ್ಕಾರಿ ಜಾಗದಲ್ಲಿ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಎಲ್ಲಿಯಾದರೂ ಅಗ್ನಿ ಅವಘಡ ಸಂಭವಿಸಿದರೆ ಸುಮಾರು 20 ಕಿ.ಮೀ.ದೂರದ ಜಿಲ್ಲಾ ಕೇಂದ್ರದಿಂದ ಅಗ್ನಿಶಾಮಕ ವಾಹನಗಳೇ ಬಂದು ರಕ್ಷಣೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಇದರಿಂದ ಜನರು ತೊಂದರೆ ಅನುಭವಿಸುವಂತಾಗುತ್ತಿದೆ. ಅಗ್ನಿಶಾಮಕ ಠಾಣೆಯ ಕಟ್ಟಡ ನಿರ್ಮಾಣ ಮಾಡಲು 2 ಕೋಟಿ ರೂ. ಹಾಗೂ ಉಳಿದ ಹಣದಲ್ಲಿ ವಾಹನ ಹಾಗೂ ಸಿಬ್ಬಂದಿಗೂ ಅನುದಾನಕ್ಕೆ ಮಂಜೂರು ಮಾಡಲಾಗಿದೆ. ಈ ಕಟ್ಟಡ ನಿರ್ಮಾಣ ಕಾರ್ಯವನ್ನು ಆರು ತಿಂಗಳೊಳಗೆ ಪೂರ್ಣಗೊಳ್ಳಬೇಕು ಎಂದು ಗುತ್ತಿಗೆದಾರರು ಹಾಗೂ ಇಂಜಿನಿಯರ್ಗೆ ಸೂಚಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಮಾತನಾಡಿ, ಕಾಳ್ಗಿಚ್ಚಿನಿಂದ ಸಕಲೇಶಪುರ ಹಾಗೂ ಆಲೂರು ಭಾಗಗಳಲ್ಲಿ ಬೆಂಕಿ ಅನಾಹುತದಿಂದ ಬೆಳೆ ನಷ್ಟ ಉಂಟಾಗುತ್ತಿದೆ. ಇದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಈ ಅಗ್ನಿಶಾಮಕ ಠಾಣೆ ಕಾರ್ಯ ನಿರ್ವಹಿಸಲಿದೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವೇದಾ ಸುರೇಶ್, ಮಾಜಿ ಅಧ್ಯಕ್ಷ ಡಿ.ಎಸ್.ಜಯಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು, ಕಣತೂರು ಗ್ರಾಮ ಪಂಚಾಯಿತಿ ಸದಸ್ಯ ಪೃಥ್ವಿ, ಕೃಷ್ಣೇಗೌಡ, ಜೆಡಿಎಸ್ ಮುಖಂಡರಾದ ಯೋಗೇಶ್, ಬಸವರಾಜ್, ಪ್ರಶಾಂತ್ಗಾಂಧಿ, ಅಗ್ನಿಶಾಮಕ ದಳದ ಸಿಬ್ಬಂದಿ ಉಪಸ್ಥಿತರಿದ್ದರು.