ಚಿತ್ರದುರ್ಗ: ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುವ ಮೂಲಕ ಎಂದಿನಂತೆ ತರಗತಿಗಳು ಸುಗಮವಾಗಿ ನಡೆಯಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿದ್ದು, 23 ದಿನಗಳಿಂದಲೂ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿ ನಡೆದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಹಿನ್ನಡೆ ಉಂಟಾಗಿದೆ. ಆದ್ದರಿಂದ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಿ, ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.
ಕೆಲ ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಆದರೆ, ತರಗತಿಗಳು ನಡೆಯದೆ, ವಿಷಯ ಅರ್ಥವಾಗದೆ, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಅತಿಥಿ ಉಪನ್ಯಾಸಕರೂ ಗೌರವಯುತ ಜೀವನ ನಡೆಸಲು ಸಹಕರಿಸುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ದರಿಂದ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನಿಗದಿ, ಸಮಯಕ್ಕೆ ಸರಿಯಾಗಿ ಮಾಸಿಕ ಪಾವತಿ, ಖಾಲಿ ಇರುವ ಉಪನ್ಯಾಸಕರ ಹುದ್ದೆ ಭರ್ತಿಗೆ ಅಗತ್ಯ ಕ್ರಮವಹಿಸಬೇಕು ಎಂದು ಕೋರಿದರು.
ಪದಾಧಿಕಾರಿಗಳಾದ ಸುದರ್ಶನ್ ನಾಯ್ಕ, ಕನಕರಾಜ್ ಕೋಡಿಹಳ್ಳಿ, ಸಿದ್ದೇಶ್, ಗೋಪಿ, ಚಿತ್ರಸ್ವಾಮಿ, ಚೈತ್ರಾ, ಮನೋಜ್ ಇತರರಿದ್ದರು.