ಬೆಳಗಾವಿ: ಕ್ಯಾಂಪ್ ಪ್ರದೇಶದ ಮೂರುವರೆ ವರ್ಷದ ಬಾಲಕಿಯ ಅತ್ಯಾಚಾರ ಎಸಗಿರುವವರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ನ್ಯಾಶನಲ್ ಫೆಡರೇಷನ್ ಆಫ್ ಇಂಡಿಯನ್ ವುಮನ್ ಸಂಘಟನೆ ಹಾಗೂ ಇತರ ಸಂಘಟನೆಗಳ ಪದಾಧಿಕಾರಿಗಳು ಡಿಸಿಪಿ ಡಾ. ವಿಕ್ರಂ ಆಮಟೆ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ರಾಹುಲ್ ಬ್ರಿಗೇಡಿಯರ್ ಮಹಿಳಾ ಘಟಕದ ಅಧ್ಯಕ್ಷೆ ರುಕ್ಸಾನಾ ಕೇಡೇಕರ್ ಮಾತನಾಡಿ, ಮಹಿಳೆ ಮತ್ತು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ. ಅತ್ಯಾಚಾರಿಗಳಿಗೆ ಬೇರೆ ಶಿಕ್ಷೆ ನೀಡದೆ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ರಾಜ್ಯ ಕಾರ್ಯದರ್ಶಿ ಪ್ರಮೋದಾ ಹಜಾರೆ ಮಾತನಾಡಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿ ಹಾಗೂ ಆಕೆಯ ತಾಯಿಗೆ ಕೌನ್ಸಲಿಂಗ್ ಅವಶ್ಯಕತೆಯಿದೆ. ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅವರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ಅಂದಾಗ ಮಾತ್ರ ಆರೋಪಿಗೆ ತಕ್ಕ ಶಿಕ್ಷೆ ಆಗಲು ಸಾಧ್ಯ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಡಾ.ವಿಕ್ರಂ ಆಮಟೆ, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಖಡೇಬಜಾರ್ ಎಸಿಪಿ ಚಂದ್ರಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಶಂಕಿತನೋರ್ವನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಕೆಲಕಾಲ ಮಾರುಕಟ್ಟೆ ಬಂದ್: ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ಮಂಗಳವಾರ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬಾಪಟ್ ಗಲ್ಲಿ ವ್ಯಾಪಾರಸ್ಥರು ಬುಧವಾರ ಕೆಲ ಹೊತ್ತು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟಿಸಿದರು. ಕೃತ್ಯಕ್ಕೆ ಅಕ್ರೋಶ ವ್ಯಕ್ತಪಡಿಸಿದ ವರ್ತಕರು ಹಾಗೂ ನಾಗರಿಕರು, ಅತ್ಯಾಚಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.