ಚಿತ್ತಾಪುರ: ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಮೊದಲು ಕೋವಿಡ್-19 ಪರೀಕ್ಷೆ ಮಾಡಿಕೊಳ್ಳಬೇಕು. ಇದರಿಂದ ಕರೊನಾ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುರೇಶ ಮೇಕಿನ್ ಅಭಿಪ್ರಾಯಪಟ್ಟರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರ್ಕಾರಿ ಕಚೇರಿ ಸಿಬ್ಬಂದಿ, ವ್ಯಾಪಾರಿಗಳು, ಅಧಿಕಾರಿಗಳು ಕರೊನಾ ಪರೀಕ್ಷೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಇದರಿಂದ ಇನ್ನೊಬ್ಬರಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರಿಯಾಗುತ್ತದೆ. ಇಂದು ಯಾವ ಲಕ್ಷಣಗಳು ಇಲ್ಲದಿದ್ದರೂ ಕರೊನಾ ಬರುತ್ತಿದೆ. 7 ದಿನಗಳಲ್ಲಿ ಸೂಕ್ತ ಚಿಕಿತ್ಸೆಯಿಂದ ಸೋಂಕು ತಡೆಯಬಹುದಾಗಿದೆ. ಹೀಗಾಗಿ ಕರೊನಾ ಬಗ್ಗೆ ಭಯ ಬೇಡ, ಎಚ್ಚರಿಕೆ ವಹಿಸಿ ಎಂದು ಕರೆ ನೀಡಿದರು.
ತಾಪಂ ಅಧ್ಯಕ್ಷ ಜಗಣ್ಣಗೌಡ ಪಾಟೀಲ್ ರಾಮತೀರ್ಥ ಅವರು ಕರೋನಾ ಸೇನಾನಿಗಳಾದ ತಹಸೀಲ್ದಾರ್ ಉಮಾಕಾಂತ ಹಳ್ಳೆ, ತಾಲೂಕು ಆರೋಗ್ಯಧಿಕಾರಿ ಡಾ. ಸುರೇಶ ಮೇಕಿನ್, ತಾಪಂ ಇಒ ಡಾ.ಬಸಲಿಂಗಪ್ಪ ಡಿಗ್ಗಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸಿಪಿಐ ಕೃಷ್ಣಪ್ಪ ಕಲ್ಲದೇವರ ಹಾಗೂ ತಾಲೂಕಿನ ಅಧಿಕಾರಿಗಳು, ಪತ್ರಕರ್ತರನ್ನು ಸನ್ಮಾನಿಸಿ ಅಭಿನಂದಿಸಿದರು.
ಉಪಾಧ್ಯಕ್ಷ ಹರಿನಾಥ ಚವ್ಹಾಣ್, ಶಹಾಬಾದ್, ಕಾಳಗಿ ತಾಪಂ ಸದಸ್ಯರು, ವ್ಯವಸ್ಥಾಪಕ ಅಮೃತ ಕ್ಷೀರಸಾಗರ ಇದ್ದರು.