ಸೊರಬ: ತಾಲೂಕಿನ ಚಂದ್ರಗುತ್ತಿ ಹೋಬಳಿಯ ಬೆನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮರೂರು ಗ್ರಾಮದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಸೋಮವಾರ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಮಾತನಾಡಿ, ಹಲವಾರು ವರ್ಷಗಳಿಂದ ಕಮರೂರು ಗ್ರಾಮದಲ್ಲಿ ಅಲೆಮಾರಿ ಜನಾಂಗ ವಾಸವಾಗಿದ್ದು ಯಾರಾದರೂ ಮರಣ ಹೊಂದಿದರೆ ಹತ್ತಾರು ಕಿಮೀ ದೂರದ ಅರಣ್ಯ ಪ್ರದೇಶದಲ್ಲಿ ಶವ ಸಂಸ್ಕಾರ ಮಾಡಬೇಕಾಗಿದೆ. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಈ ಸಂಬಂಧ ಬೆನ್ನೂರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದು 2018ರಲ್ಲಿ ಸ್ಥಳ ಪರಿಶೀಲನೆ ನಡೆಸಿ ಕಮರೂರು ಗ್ರಾಮದ ಸರ್ವೇ ನಂ.92ರಲ್ಲಿ 2 ಎಕರೆ ಜಾಗವನ್ನು ಕಾಯ್ದಿರಿಸುವಂತೆ ಹಾಗೂ ಸ್ಮಶಾನ ಮಂಜೂರಾತಿ ನೀಡುವಂತೆ ಸಭೆ ನಿರ್ಣಯ ಕೈಗೊಂಡಿದೆ. ಈ ಸಂಬಂಧ ತಹಸೀಲ್ದಾರ್ ಅವರಿಗೆ ಎಲ್ಲ ದಾಖಲಾತಿಗಳು ನೀಡಿದ್ದರೂ ಅಲೆಮಾರಿಗಳಿಗೆ ಸ್ಮಶಾನ ಜಾಗ ಮಂಜೂರು ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿ ಗ್ರಾಮದಲ್ಲಿ ಸ್ಮಾಶನ ಭೂಮಿ ಮಂಜೂರು ಮಾಡುವಂತೆ ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳು ಅಧಿಕಾರಿಗಳು ಗಮನಹರಿಸುತ್ತಿಲ್ಲ. ಅಲೆಮಾರಿಗಳು ಬದುಕು ಕಟ್ಟಿಕೊಳ್ಳಲು ಹೈರಾಣಾಗಿದ್ದು ಮತ್ತೆ ಸಾವಿನಲ್ಲೂ ಮುಕ್ತಿ ಕಾಣಲು ಸ್ಮಾಶನವಿಲ್ಲದೆ ಪರದಾಡುವಂತಾಗಿದೆ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಮಶಾನ ಭೂಮಿ ಮಂಜೂರಾತಿ ಮಾಡಲು ಮುಂದಾಗದಿದ್ದರೆ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.