ಧಾರವಾಡ: ಅಲ್ಪಸಂಖ್ಯಾತರನ್ನು ಶಿಕ್ಷಣದ ಮೂಲಕವೇ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಈ ನಿಟ್ಟಿನಲ್ಲಿ ಮದರಸಾಗಳ ಶಿಕ್ಷಣ ಪದ್ಧತಿಯೊಂದಿಗೆ ಇತರ ನಿಗದಿತ ಪಠ್ಯಕ್ರಮಗಳನ್ನು ವಯಸ್ಸಿಗೆ ತಕ್ಕಂತೆ ಬೋಧಿಸುವುದು ಅಗತ್ಯವಾಗಿದೆ ಎಂದು ಕೈಮಗ್ಗ,
ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಇಲಾಖೆ ಪ್ರಗತಿಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಯು ಅಗತ್ಯ ಕಾರ್ಯಕ್ರಮ ರೂಪಿಸಬೇಕು. ರಾಜ್ಯದ ಕೈಮಗ್ಗ ಹಾಗೂ ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಬದುಕಿಗೆ ಆರ್ಥಿಕ ನೆರವು ನೀಡಲು ನೇಕಾರ ಸಮ್ಮಾನ್ ಯೋಜನೆಯಡಿ ಪ್ರತಿ ನೇಕಾರ ಕುಟುಂಬಕ್ಕೆ ವಾರ್ಷಿಕ ತಲಾ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ್ ಮಾತನಾಡಿ, ಅಲ್ಪಸಂಖ್ಯಾತರಿಗೆ ವೃತ್ತಿ ಶಿಕ್ಷಣ ನೀಡಬೇಕೆಂಬ ಸಚಿವರ ಕಾಳಜಿ ಅರ್ಥಪೂರ್ಣವಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಂಸ್ಥೆಗಳು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕ ಮೆಹಬೂಬ್ ಪಾಷಾ ಮಾತನಾಡಿ, ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರಿದ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಇಲಾಖೆಯ ಇನ್ನಷ್ಟು ವಸತಿ ನಿಲಯಗಳ ಸ್ಥಾಪನೆ ಅಗತ್ಯವಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವುದು ಅಗತ್ಯ ಎಂದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕೆಆರ್ಐಡಿಸಿಎಲ್ ಇಂಜಿನಿಯರ್ಸ್, ವಕ್ಪ್ ಅಧಿಕಾರಿಗಳು, ಅಲ್ಪಸಂಖ್ಯಾತರ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು, ಇತರರು ಇದ್ದರು.
ಇತರ ಜಿಲ್ಲೆಗೆ ಮಾದರಿ: ಇಲಾಖೆ ಜಿಲ್ಲಾ ಅಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ ಮಾತನಾಡಿ, ಜಿಲ್ಲೆಯಲ್ಲಿ ಅಂದಾಜು 4.5 ಲಕ್ಷ ಅಲ್ಪಸಂಖ್ಯಾತರ ಸಮುದಾಯದ ಜನಸಂಖ್ಯೆ ಇದೆ. 4 ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಗಳು, 3 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳು, 9 ಮೆಟ್ರಿಕ್ ನಂತರದ ಹಾಸ್ಟೆಲ್ಗಳಿವೆ. ಅಲ್ಲಿ ಪೀಠೋಪಕರಣ, ಬಿಸಿ ನೀರು, ಬಯೋ ಮೆಟ್ರಿಕ್, ಸಿಸಿ ಟಿವಿ, ಜಿಮ್ನಾಸ್ಟಿಕ್ಸ್, ಕ್ರೀಡಾ ಸಾಮಗ್ರಿ ನೀಡಲಾಗಿದೆ. ನಿಗದಿತ ಪೌಷ್ಟಿಕ ಆಹಾರ ವಿತರಣೆಯಿಂದ ಇತರ ಜಿಲ್ಲೆಗಳಿಗೆ ಮಾದರಿಯಾಗಿವೆ. ಜಿಲ್ಲೆಯಲ್ಲಿ ಐದು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿವೆ ಎಂದರು.