More

    ಅಸಂಘಟಿತ ಕಾರ್ಮಿಕರಿಗೆ ಪರಿಹಾರ ತಲುಪಿಸಿ

    ಬೆಳಗಾವಿ: ಕರೊನಾ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಧನವನ್ನು ಅರ್ಹ ಕಾರ್ಮಿಕರಿಗೆ ತಲುಪಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ನೀಡುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಕ್ಷೌರಿಕರು, ಅಗಸರು, ಟೈಲರ್, ಹಮಾಲಿ, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕಾನಿಕ್, ಕಮ್ಮಾರರು, ಗೃಹ ಕಾರ್ಮಿಕರು ಹಾಗೂ ಚಮ್ಮಾರರಿಗೆ 2 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ಮೂಲಕ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬೇಕು. ಆಯಾ ಕಾರ್ಮಿಕ ಸಂಘ-ಸಂಸ್ಥೆಗಳು ಅರ್ಹ ಕಾರ್ಮಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನೆರವಾಗಬೇಕು. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಎಲ್ಲ ಅರ್ಹ ಕಾರ್ಮಿಕರಿಗೆ ನೆರವು ತಲುಪಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು.

    ಅರ್ಜಿ ಸಲ್ಲಿಸುವ ಕಾರ್ಮಿಕರಿಗೆ ಸ್ವಯಂ ಘೋಷಣೆ ಪತ್ರ ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ಉದ್ಯೋಗ ದೃಢೀಕರಣ ಪತ್ರ ನೀಡಲಿದ್ದಾರೆ. ಸ್ಥಳೀಯವಾಗಿ ಕೆಲಸ ಮಾಡುವ ಕಾರ್ಮಿಕರ ಕುರಿತು ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಈ ಮಾಹಿತಿ ಆಧರಿಸಿ ಅವರು ಉದ್ಯೋಗ ದೃಢೀಕರಣ ಪತ್ರ ನೀಡಬೇಕು. ಉದ್ಯೋಗ ದೃಢೀಕರಣ ಪತ್ರ ನೀಡಲು ಸತಾಯಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು
    ಎಚ್ಚರಿಕೆ ನೀಡಿದರು.

    ಲಸಿಕೆ ನೀಡಲು ಒತ್ತಾಯ: ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ ಮಾತನಾಡಿ, ಕಳೆದ ಬಾರಿ ಯಾವ ಮಾನದಂಡ ಆಧರಿಸಿ ಉದ್ಯೋಗ ಪ್ರಮಾಣ ಪತ್ರ ನೀಡಬೇಕು ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಆದ್ದರಿಂದ ಕೆಲವು ಕಡೆ ವಿಳಂಬವಾಗಿದೆ. ಆದರೆ, ಈ ಸಲ ಸ್ವಯಂ ಘೋಷಣೆ ಆಧರಿಸಿ ಉದ್ಯೋಗ ಪ್ರಮಾಣ ಪತ್ರ ನೀಡಬೇಕು ಎಂದು ಸೂಚನೆ ನೀಡಲಾಗುವುದು ಎಂದು ತಿಳಿಸಿದರು. ಕ್ಷೌರಿಕ ವೃತ್ತಿ ನಿರತರಿಗೆ ಕೂಡ ಕೋವಿಡ್ ನಿರೋಧಕ ಲಸಿಕೆ ನೀಡಲು
    ಕ್ರಮ ಕೈಗೊಳ್ಳಬೇಕು ಎಂದು ಕ್ಷೌರಿಕ ಸಮಾಜದ ಸಂಘಟನೆಯ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.

    ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಮಾತನಾಡಿ, ಕಾರ್ಮಿಕ ಸಂಘಟನೆಗಳು ಒಂದು ಸ್ಥಳ ಹಾಗೂ ಸಮಯವನ್ನು ನಿಗದಿಪಡಿಸಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಮುಂದಾದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ತಾಂತ್ರಿಕ ಮತ್ತಿತರ ನೆರವು ನೀಡಲಿದ್ದಾರೆ ಎಂದು ತಿಳಿಸಿದರು.

    ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ, ಸರ್ಕಾರ ಘೋಷಿಸಿರುವ ನೆರವು ಪಡೆಯಲು ನಿಗದಿಪಡಿಸಿರುವ ಪ್ರಕ್ರಿಯೆ ಕ್ಲಿಷ್ಟಕರವಾಗಿದೆ. ಅದನ್ನು ಸರಳೀಕರಿಸಿದಾಗ ಮಾತ್ರ ಅಸಂಘಟಿತ ಕಾರ್ಮಿಕರು ಪ್ರಯೋಜನ ಪಡೆಯುವುದು ಸಾಧ್ಯ ಎಂದರು. ಚೇಂಬರ್ ಆಫ್ ಕಾಮರ್ಸ್, ಅಸಂಘಟಿತ ವಲಯದ ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

    ಏಜೆಂಟ್ ಮಧ್ಯಸ್ಥಿಕೆ ಬೇಡ: ಸರ್ಕಾರದ ಆರ್ಥಿಕ ನೆರವು ಅರ್ಹ ಕಾರ್ಮಿಕರಿಗೆ ತಲುಪಿಸಲು ಕಾರ್ಮಿಕ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಏಜೆಂಟರು ಈ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆ ವಹಿಸದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಅವರಿಗೆ ನೆರವು ತಲುಪಿಸುವುದು ಸುಲಭ ಕೆಲಸವಾಗಿದೆ. ಅದೇ ರೀತಿ ಅಸಂಘಟಿತ ಕಾರ್ಮಿಕರಿಗೆ ಕೂಡ ಮುಂಬರುವ ದಿನಗಳಲ್ಲಿ ಸರಳ ರೀತಿಯಲ್ಲಿ ಅವರ ಖಾತೆಗೆ ಸರ್ಕಾರದ ನೆರವು ತಲುಪಿಸಲು ಅನುಕೂಲವಾಗಲಿದೆ. ತಾಲೂಕು ಮಟ್ಟದಲ್ಲಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿರುವ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ನೆರವು ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts