ಚಿತ್ರದುರ್ಗ: ಅಸಂಘಟಿತ ಕಾರ್ಮಿಕರ ಗೌರವಧನ ಹೆಚ್ಚಳ ಸೇರಿ ನ್ಯಾಯಯುತ ಬೇಡಿಕೆಗಳೆಲ್ಲವನ್ನೂ ಈಡೇರಿಸಬೇಕು ಎಂದು ಆಗ್ರಹಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು, ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ರಾಜ್ಯದ ಎಲ್ಲಾ ಪೌರಕಾರ್ಮಿಕರ, ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಿ, ಸರ್ಕಾರಿ ಸೌಲಭ್ಯ ವಿಸ್ತರಿಸಬೇಕು. ಪ್ರತಿ ವರ್ಷ 2,500 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳಾಗಿ ಉನ್ನತೀಕರಿಸಬೇಕು. ಸರ್ಕಾರಿ ಆಸ್ಪತ್ರೆ ಸೇರಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಿಎಚ್ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತೃತೀಯ ಲಿಂಗಿಗಳ ಕಲ್ಯಾಣ ಮಂಡಳಿ ಸ್ಥಾಪಿಸಿ ಸ್ವ-ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಮೈಸೂರಿನಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಕೊಳೆಗೇರಿ ಪ್ರದೇಶಗಳನ್ನು ಶ್ರಮಿಕನಿವಾಸ ಪ್ರದೇಶವೆಂದು ನಾಮಕರಣ ಮಾಡಬೇಕು. ವಸತಿ ಸಮಸ್ಯೆಗೆ ತೊಡಕಾಗಿರುವ ಅರಣ್ಯ ಕಾಯ್ದೆಗೆ ತಿದ್ದುಪಡಿಗೊಳಿಸಬೇಕು ಎಂದು ಕೋರಿದರು.
ಮುಖಂಡರಾದ ಜಿ.ಸಿ.ಸುರೇಶ್ಬಾಬು, ಟಿ.ಆರ್.ಉಮಾಪತಿ, ಬಿ.ರಾಜಣ್ಣ, ಸತ್ಯಕೀರ್ತಿ ಇತರರಿದ್ದರು.