ಹಾಸನ : ಚನ್ನರಾಯಪಟ್ಟಣ ತಾಲೂಕಿನ ಎ.ಚೋಳೇನಹಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ಆಕಸ್ಮಿಕ ಬೆಂಕಿಗೆ ಕೊಬ್ಬರಿ ತುಂಬಿದ್ದ ಗೋದಾಮು ಸುಟ್ಟು ಕರಕಲಾಗಿದೆ.
ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಬಿಂದಿಗೆ, ಬಕೆಟ್ಗಳಲ್ಲಿ ನೀರು ತಂದು ಎರಚಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಬೆಂಕಿ ವ್ಯಾಪಿಸಿತ್ತು.
ವಿಷಯ ತಿಳಿದು ಚನ್ನರಾಯಪಟ್ಟಣ ಹಾಗೂ ಕೆ.ಆರ್.ಪೇಟೆಯಿಂದ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ನಾಲ್ಕೈದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆ ವೇಳೆಗಾಗಲೇ ಕೊಬ್ಬರಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಗೋದಾಮಿನ ಗೋಡೆಗಳು ಬಿರುಕು ಬಿಟ್ಟಿದ್ದು ಬಾಗಿಲು, ಕಿಟಕಿಗಳು ಹಾಗೂ ಛಾವಣಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಶಾಸಕ ಸಿ.ಎನ್.ಬಾಲಕೃಷ್ಣ ಅವರ ಸಹೋದರ ಜಿಪಂ ಮಾಜಿ ಸದಸ್ಯ ಸಿ.ಎನ್.ಪುಟ್ಟಸ್ವಾಮಿಗೌಡ ಅವರಿಗೆ ಸೇರಿದ ಗೋದಾಮು ಇದಾಗಿದ್ದು, ಗೋದಾಮಿನಲ್ಲಿ ಸುಮಾರು 40 ರಿಂದ 50 ಸಾವಿರಕ್ಕೂ ಹೆಚ್ಚು ಕೊಬ್ಬರಿ ಇತ್ತು ಎನ್ನಲಾಗಿದೆ. ಪಂಚಾಯಿತಿ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.