ಹನೂರು: ಕ್ಷೇತ್ರದಲ್ಲಿ ಆದಿಜಾಂಬವ ಸಮುದಾಯದ ಅಭಿವೃದ್ಧಿಗೆ ಶಾಸಕ ಆರ್.ನರೇಂದ್ರ ಹೆಚ್ಚಿನ ಒತ್ತು ನೀಡುವ ಜತೆಗೆ ಹಲವು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ಸಮುದಾಯ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಅವರಿಗೆ ಮತ್ತೊಮ್ಮೆ ಶಕ್ತಿ ತುಂಬಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಮನವಿ ಮಾಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಆದಿಜಾಂಬವ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇಶದಲ್ಲಿ 70 ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉತ್ತಮ ಆಡಳಿತವನ್ನು ನೀಡುವುದರ ಜತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿ ಬಡವರು, ಹಿಂದುಳಿದವರು, ಕೃಷಿಕರು, ಮಹಿಳೆಯರು ಹಾಗೂ ಇತರ ವರ್ಗಕ್ಕೆ ಅನುಕೂಲ ಕಲ್ಪಿಸಿದ್ದು, ಅಭಿವೃದ್ಧಿಗಾಗಿ ಶ್ರಮಿಸಿದೆ. ಜತೆಗೆ ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯವನ್ನು ನೀಡುವುದರ ಮೂಲಕ ಸಮಾನತೆಯನ್ನು ಎತ್ತಿ ಹಿಡಿದಿದೆ. ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಶಾಸಕ ಆರ್.ನರೇಂದ್ರ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದು ಕೆ-ಶಿಪ್ ಯೋಜನೆಯಡಿ ರಸ್ತೆ ಅಭಿವೃದ್ಧಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನ, ಆದಿಜಾಂಬವ ಸಮುದಾಯ ಸೇರಿದಂತೆ 213 ಭವನಗಳ ನಿರ್ಮಾಣ, ಏಕಲವ್ಯ, ಮುರಾರ್ಜಿ, ಇಂದಿರಾಗಾಂಧಿ ವಸತಿ ಶಾಲೆಗಳ ಸ್ಥಾಪನೆ, ಬಸ್ ನಿಲ್ದಾಣ, ಸೇತುವೆಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.
ಈ ದಿಸೆಯಲ್ಲಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಸಚಿವರಾಗಲಿದ್ದಾರೆ. ಇದರಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಸಮುದಾಯದ ಜನತೆ ಕಾಂಗ್ರೆಸ್ ಬೆಂಬಲಿಸುವುದರ ಮೂಲಕ ಹನೂರು ಕಾಂಗ್ರೆಸ್ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಬೇಕು ಎಂದು ತಿಳಿಸಿದರು.
ಆದಿಜಾಂಬವ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಶಿವಮೂರ್ತಿ, ನರೇಂದ್ರ ಪುತ್ರ ನವನೀತ್ಗೌಡ, ತಮಿಳುನಾಡಿನ ಊಟಿ ಶಾಸಕ ಗಣೇಶ್, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಸುದೇಶ್, ಮುಖಂಡರಾದ ಬೂದುಬಾಳು ಮಹದೇವ, ರಂಗಯ್ಯ, ರಾಜೇಶ್, ಪಾಳ್ಯದ ರಾಚಪ್ಪ, ಕರಿಯನಪುರದ ರಾಚಯ್ಯ ಇದ್ದರು.