ತುಮಕೂರು : ಜಿಲ್ಲೆಯಲ್ಲಿ ಕರೊನಾ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ವಿವಿಧೆಡೆ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕರೊನಾ ಸಂಬಂಧ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿನ ನಿಯಂತ್ರಣಕ್ಕಾಗಿ ಲಸಿಕಾಕರಣ ಅಭಿಯಾನ ಎಲ್ಲ ತಾಲೂಕುಗಳಲ್ಲಿಯೂ ಯಶಸ್ವಿಗೊಳಿಸಬೇಕು, ಲಸಿಕೆ ಕುರಿತು ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ ಪ್ರವಾಣದಲ್ಲಿ ಲಸಿಕಾರಣ ಕಾರ್ಯ ಮಾಡಬೇಕು ಎಂದರು.
ಪಾವಗಡ ತಾಲೂಕಿನಲ್ಲಿ ಮಾದರಿ ಯೋಜನೆಯೊಂದನ್ನು ರೂಪಿಸಿ ಒಂದೊಂದು ದಿನ ಒಂದೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಲಸಿಕೆ ನೀಡಬೇಕು. ಲಸಿಕೆ ನೀಡುವ ಮುನ್ನ ಗ್ರಾಪಂನಲ್ಲಿ ಢಂಗೂರ ಸಾರಬೇಕು. ಲಸಿಕಾಕರಣದ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಲಸಿಕೆ ನೀಡಬೇಕು ಎಂದು ತಹಸೀಲ್ದಾರ್, ಇಒ, ತಾಲೂಕು ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಬೆಳೆ ಸಮೀಕ್ಷೆ ಆ್ಯಪ್ ಮೂಲಕ ರೈತರು ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಬಗ್ಗೆ ಎಲ್ಲ ತಹಸೀಲ್ದಾರ್, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹೆಚ್ಚಿನ ಪ್ರಚಾರ ವಾಡಿ ಬೆಳೆ ಸಮೀಕ್ಷೆ ಕೈಗೊಳ್ಳಲು ರೈತರಿಗೆ ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಈ ಬಾರಿ ಶೇ.50 ಬೆಳೆ ಸಮೀಕ್ಷೆ ಪ್ರಗತಿ ರೈತರಿಂದಲೇ ಆಗಬೇಕಿದೆ. ಹಾಗಾಗಿ, ರೈತರಿಗೆ ಹೆಚ್ಚು ಅರಿವು ಮೂಡಿಸಿ ರೈತರೇ ಬೆಳೆ ಸಮೀಕ್ಷೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.
ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಸಂಭಾವ್ಯ 3ನೇ ಅಲೆ ತಡೆಗಾಗಿ ಸರ್ಕಾರ ಆರೋಗ್ಯ ನಂದನ್ ಕಾರ್ಯಕ್ರಮ ರೂಪಿಸಿದ್ದು, ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಈ ಕಾರ್ಯಕ್ರಮದ ಅಂಗವಾಗಿ ಶಾಲೆಗೆ ಆಗಮಿಸುವ ಮಕ್ಕಳಿಗೆ ತಪಾಸಣೆ, ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ವಿತರಣೆ, ಶಾಲೆಗೆ ತೆರಳುವ ಪೋಷಕರಿಗೆ ಲಸಿಕೆ ನೀಡಲು ಕ್ರಮವಹಿಸಬೇಕು ಎಂದರು.
ಕೆಶಿಪ್ ರಸ್ತೆ ಅಭಿವೃದ್ಧಿ ಕಾಮಗಾರಿ ಶ್ರೀ ಪೂರ್ಣಗೊಳಿಸಿ : ರಾಷ್ಟ್ರೀಯ ಹೆದ್ದಾರಿಯಷ್ಟೇ ಕೆಶಿಪ್ ರಸ್ತೆಗೂ ಪ್ರಾಮುಖ್ಯತೆ ನೀಡಿ ಶ್ರೀ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೆಶಿಪ್ ರಸ್ತೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಮಾಗಡಿ-ಸೋಮವಾರಪೇಟೆ ಕೆಶಿಪ್ ರಸ್ತೆಗೆ ಭೂಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಸೂಕ್ತ ಪರಿಹಾರ ಕಲ್ಪಿಸಿ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದರು.
ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮಾಡದೆ, ಯಾವುದೇ ಗೊಂದಲವಿಲ್ಲದೆ ಸೂಕ್ತ ಪರಿಹಾರ ಒದಗಿಸಿ ಅಭಿವೃದ್ಧಿ ಕೆಲಸವನ್ನು ಸರಾಗವಾಗಿ ನಡೆಸಬೇಕು ಎಂದು ಸೂಚಿಸಿದರು.
ಕೆಶಿಪ್ ರಸ್ತೆಯ ವಿಶೇಷ ಜಿಲ್ಲಾಧಿಕಾರಿ ಲೋಕನಾಥ್ ಮಾತನಾಡಿ, ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ಕಲ್ಪಿಸುವ ಪ್ರಕ್ರಿಯನ್ನು ಪೂರ್ಣಗೊಳಿಸಿ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದರು. ಉಪವಿಭಾಗಾಧಿಕಾರಿ ಅಜಯ್, ಕೆಶಿಪ್ ರಸ್ತೆಯ ತಹಸೀಲ್ದಾರ್ ರಾಮಕೃಷ್ಣಮೂರ್ತಿ ಇದ್ದರು.