ದಾವಣಗೆರೆ: ರಾಜ್ಯ ಸರ್ಕಾರ ಮಾ.19ರೊಳಗಾಗಿ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಮಾ.20ರಂದು ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಮಾದಿಗ ದಂಡೋರ ಜಿಲ್ಲಾ ಸಮಿತಿ ನಿರ್ಧರಿಸಿದೆ.
ನಗರದ ಶಿವಾನಿ 3 ಹೋಟೆಲ್ನಲ್ಲಿ ಸಂಘಟನೆಯ ಕಾರ್ಯಕಾರಿ ಸಮಿತಿ ತುರ್ತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಸಮಾಜದವರು ಭಾಗವಹಿಸಬೇಕೆಂದು ಮನವಿ ಮಾಡಲಾಯಿತು ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ತಿಳಿಸಿದ್ದಾರೆ.
ಸಂವಿಧಾನದ ಆಶಯದಂತೆ ಒಳ ಮೀಸಲು ವರ್ಗೀಕರಣಕ್ಕಾಗಿ ಅನೇಕ ವರ್ಷಗಳಿಂದ ಹೋರಾಟ ಮಾಡಲಾಗಿದೆ. ಎ.ಜೆ. ಸದಾಶಿವ ಆಯೋಗವು ಯಾವ ಜಾತಿಗಳಿಗೆ ಮೀಸಲಾತಿಯಲ್ಲಿ ಎಷ್ಟು ಪ್ರಮಾಣ ಕಲಿಸಬೇಕೆಂಬ ಸಮಗ್ರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿ ವರ್ಷಗಳೇ ಕಳೆದರೂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿಲ್ಲ. ನಮ್ಮ ಮನವಿಗೆ ಸರ್ಕಾರ ಕಿವಿಗೊಟ್ಟಿಲ್ಲ.
ಸದಾಶಿವ ಆಯೋಗ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅನೇಕರು ಭರವಸೆ ನೀಡಿದ್ದರೂ ಸಮಾಜಕ್ಕೆ ದ್ರೋಹವಾಗಿದೆ. ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ಅನಿವಾರ್ಯವಾಗಲಿದೆ ಎಂದು ಸರ್ಕಾರಕ್ಕೆ ಸಭೆ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಸಮಿತಿಯ ಹಿರಿಯ ಉಪಾಧ್ಯಕ್ಷ ಬಿ.ಎಚ್.ಚಿದಾನಂದಪ್ಪ, ಮಳಲ್ಕೆರೆ ಶೇಖರಪ್ಪ, ಶಾಮನೂರು ದಾನಪ್ಪ, ಬಿ.ಮಲ್ಲೇಶಪ್ಪ, ಎಚ್.ಹಾಲೇಶ, ನಾಗರಾಜ, ಎಂ.ಶಿವಕುಮಾರ್, ಎಚ್.ಬಸವರಾಜ, ಈಚಗಟ್ಟ ಕೆಂಚಪ್ಪ ಇತರರಿದ್ದರು.