More

    ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್, ಔಷಧ ದಾಸ್ತಾನು -ಕೋವಿಡ್ ಸಭೆಯಲ್ಲಿ ಡಿಸಿ ಡಾ.ವೆಂಕಟೇಶ್ ಸೂಚನೆ

    ದಾವಣಗೆರೆ: ಕೇರಳ, ತಮಿಳುನಾಡಿನಲ್ಲಿ ಕೋವಿಡ್‌ನ ರೂಪಾಂತರ ತಳಿ ಜೆಎನ್-1 ವರದಿಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್‌ಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೋವಿಡ್‌ನ ಮೊದಲ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಇರಿಸಬೇಕು. ಆಕ್ಸಿಜನ್, ವೆಂಟಿಲೇಟರ್‌ಗಳನ್ನು ಸಜ್ಜುಗೊಳಿಸಬೇಕು. ಕೋವಿಡ್ ಪತ್ತೆಗಾಗಿ ರ‌್ಯಾಪಿಡ್ ಕಿಟ್ ಮತ್ತು ಆರ್‌ಟಿಪಿಸಿಆರ್ ಲ್ಯಾಬ್ ಅನ್ನು ಸಿದ್ಧಪಡಿಸಿಕೊಳ್ಳಬೇಕು. ಕೋವಿಡ್ ಚಿಕಿತ್ಸೆ ಬಗ್ಗೆ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ತರಬೇತಿ ಆಯೋಜಿಸಬೇಕು ತಿಳಿಸಿದರು.
    ಡಿಸೆಂಬರ್, ಜನವರಿ ತಿಂಗಳಲ್ಲಿ ಐಎಲ್ಐ, ಸಾರಿ ಪ್ರಕರಣಗಳು ಹೆಚ್ಚಲಿದ್ದು ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಮುನ್ನಚ್ಚರಿಕೆ ವಹಿಸಬೇಕಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಾಗ ಎಕ್ಸರೇ ಮತ್ತು ಸಿಟಿ ಸ್ಕ್ಯಾನ್ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದರು.
    ನಾಗರಿಕರು ಮುಂಜಾಗ್ರತೆ ವಹಿಸಲಿ
    ಕರ್ನಾಟಕದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಲು ರಾಜ್ಯ ಸರ್ಕಾರದ ನಿರ್ದೇಶನವಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡದೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಡಿಸಿ ತಿಳಿಸಿದರು.
    ಕರ್ನಾಟಕದಲ್ಲಿ 70 ಸಕ್ರಿಯ ಪ್ರಕರಣಗಳಿದ್ದು, ಸಾರ್ವಜನಿಕರು ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು.
    ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಕಿಡ್ನಿ, ಹೃದಯ, ಲಿವರ್ ಸಮಸ್ಯೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
    ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿರುವುದು ಸೂಕ್ತ. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸ್ವಯಂ ನಿಯಂತ್ರಣ ಹೊಂದುವ ಮೂಲಕ ಎಚ್ಚರಿಕೆ ವಹಿಸಬೇಕು. ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕು ಎಂದು ವಿವರಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಡಿಎಚ್‌ಒ ಡಾ. ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ನಾಗೇಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರುದ್ರಸ್ವಾಮಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಮಂಜುನಾಥ್ ಪಾಟೀಲ್, ಪಾಲಿಕೆ ಆಯುಕ್ತೆ ರೇಣುಕಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts