More

    ಇಂದು ಸಂವಿಧಾನ ರಕ್ಷಕರ ಅಗತ್ಯ ಹೆಚ್ಚಿದೆ

    ಬಾಗಲಕೋಟೆ: ಸರ್ವರನ್ನೂ ಸಮಾನವಾಗಿ ಕಾಣುವ ತತ್ವದ ಸಂವಿಧಾನದ ರಕ್ಷಕರ ಅಗತ್ಯವಿದೆ ಎಂದು ರೋಮನ್‌ ಕ್ಯಾಥೊಲಿಕ್‌ ಚರ್ಚ್‌ನ ಫಾದರ್‌ ಪ್ರಕಾಶ್‌ ಮಾರಸ್‌ ಹೇಳಿದರು.

    ಚರ್ಚ್‌ ಗೆ ಭೇಟಿ ನೀಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರಿಗೆ ಶುಭ ಕೋರಿ ಮಾತನಾಡಿದ ಅವರು,ವಿವಿಧತೆಯಲ್ಲಿ ಏಕತೆ ಕಾಣುವುದು ಭಾರತದ ವಿಶೇಷ. ಎಲ್ಲ ಸಮಾಜಗಳನ್ನು ಒಗ್ಗೂಡಿಸುವ ಕೆಲಸ ಆಗಬೇಕೇ ಹೊರತು, ವಿಘಟನೆ ಪ್ರಯತ್ನ ಮಾಡಬಾರದು. ನಾಯಕತ್ವ ವಹಿಸಿಕೊಂಡವರು ಸಮಾಜವನ್ನು ರಕ್ಷಣೆ ಮಾಡುವ ಕೆಲಸ ಮಾಡಬೇಕು. ಅಂತಹ ಗುಣವನ್ನು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರಲ್ಲಿ ಕಾಣಬಹುದು ಎಂದು ಹೇಳಿದರು.

    ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮಹತ್ವದ ಜವಾಬ್ದಾರಿ ನಮ್ಮ ಮೇಲೆ ಇದೆ. ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದರೆ ದೇಶಕ್ಕೆ ಉಜ್ವಲ ಭವಿಷ್ಯ ಸಿಗಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿ ದೊರಕಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣಲಕ್ಷಣಗಳು ಅವರಲ್ಲಿವೆ. ಕಿರಿಯ ವಯಸ್ಸಿನಲ್ಲಿಯೇ ಡಿಸಿಸಿ ಬ್ಯಾಂಕ್‌ ನಿರ್ದೇಶಕಿಯಾಗಿ, ಸ್ಪರ್ಶ ಫೌಂಡೇಷನ್‌ ಅಧ್ಯಕ್ಷೆಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ಪರ್ಶ ಫೌಂಡೇಷನ್‌ ಮೂಲಕ ಹಲವು ಕುಟುಂಬಗಳು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಂಯುಕ್ತ ಪಾಟೀಲ ಅವರಲ್ಲಿ ಇರುವ ಹುಮ್ಮಸ್ಸು ಮತ್ತು ಸೇವಾಗುಣ ಪ್ರಶಂಸನೀಯ. ಏನನ್ನೋ ಗಳಿಸಬೇಕು ಎಂಬ ಉದ್ದೇಶದಿಂದ ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ.ಜಿಲ್ಲೆಯ ಅಭಿವೃದ್ಧಿಗೆ ಹಲವು ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಸಾಮಾಜಿಕ ಬದ್ಧತೆ ಮತ್ತು ಕಳಕಳಿ ಹೊಂದಿರುವ ಸಂಯುಕ್ತ ಪಾಟೀಲ ಅವರು ಸಂಸತ್ತಿಗೆ ಆಯ್ಕೆಯಾಗಬೇಕು. ಅಂಥವರು ಸಂಸತ್ತಿನಲ್ಲಿದ್ದರೆ ಏನನ್ನಾದರೂ ನಿರೀಕ್ಷೆ ಮಾಡಬಹುದು ಎಂದರು.

    ನೀವು ಹಾಕುವ ಒಂದು ಮತದಲ್ಲಿ ಈ ದೇಶದ ಭವಿಷ್ಯವೇ ಅಡಗಿದೆ. ಈ ಅವಕಾಶ ಬಳಕೆ ಮಾಡಿಕೊಂಡು ಸಮರ್ಥರನ್ನು ಸಂಸತ್ತಿಗೆ ಕಳುಹಿಸಬೇಕು. ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

    ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿ, ದೇಶ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಮಾಡುವ ಪ್ರಯತ್ನದ ವಿರುದ್ಧ ಹೋರಾಟ ಮಾಡಬೇಕಾಗಿದೆ ಎಂದು ಹೇಳಿದರು.

    ದೇಶ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ವೈಶಿಷ್ಟ್ಯವನ್ನು ಕಾಪಾಡಿಕೊಳ್ಳಬೇಕು. ಈ ಕಾರಣಕ್ಕಾಗಿ ಕಾಂಗ್ರೆಸ್‌ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

    ವಯಸ್ಸಿನಲ್ಲಿ ಕಿರಿಯಳು, ಆದರೆ ಕನಸು ದೊಡ್ಡದಿದೆ. ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನದೇ ಆದ ಕನಸಿದೆ. ಕುಡಚಿ ಬಾಗಲಕೋಟೆ ರೈಲ್ವೆ ಮಾರ್ಗ ಅನುಷ್ಠಾನ. ಯುಕೆಪಿ ಸಂತ್ರಸ್ತರಿಗೆ ಪರಿಹಾರ, ಯುವಕರಿಗೆ ಉದ್ಯೋಗ ಕಲ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

    ಶೈಕ್ಷಣಿಕ ಕ್ಷೇತ್ರಕ್ಕೆ ಕ್ರೈಸ್ತ ಸಮಾಜದ ಕೊಡುಗೆ ಬಹು ದೊಡ್ಡದು ಎಂದು ಬಣ್ಣಿಸಿದ ಅವರು, ದೇಶದೆಲ್ಲೆಡೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಶೈಕ್ಷಣಿಕ ಕ್ರಾಂತಿಗೆ ಬಹು ದೊಡ್ಡ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಯುವ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts