ಮೈಸೂರು : ಸೇವೆಯ ಮೂಲಕ ಸಮಾಜದ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ. ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುತ್ತದೆ. ಸಮಾಜ ಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದು ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಮುಖ್ಯಸ್ಥರಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಹೇಳಿದರು.
ತಾಲೂಕಿನ ಹೆಗ್ಗನೂರು ಗ್ರಾಪಂ ವ್ಯಾಪ್ತಿಯ ಹೆಗ್ಗನೂರು ಗ್ರಾಮದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸೇವೆ ಎನ್ನುವ ಪದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯಂತ ಮಹತ್ವವನ್ನು ಪಡೆದಿದೆ. ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ ಎಂದರು.
ಸೇವೆಯ ಕಡೆಗೆ ವಿದ್ಯಾರ್ಥಿಗಳ ಮನಸ್ಸನ್ನು ಒಲಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದೆ. ಶಿಕ್ಷಣದ ಉದ್ದೇಶವೂ ಇದೇ ಆಗಬೇಕು. ಸೇವೆ ಎನ್ನುವುದು ಜೀವನದ ಪ್ರಮುಖ ಉದ್ದೇಶವಾಗಬೇಕು. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ನಂತರವೂ ಸೇವೆ, ಅನುಕಂಪನದ ಸಾರ್ಥಕ ಜೀವಿಯಾಗಬೇಕು ಎಂದು ತಿಳಿಸಿದರು.
ಹೆಗ್ಗನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸುಧೀರ್, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಆಡಳಿತ ಅಧಿಕಾರಿ ಪ್ರೊ.ಕೆ.ಪಿ.ಬಸವೇಗೌಡ, ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್, ಪ್ರೋ. ಕಾಳಚನ್ನೇಗೌಡ, ಪ್ರಾಂಶುಪಾಲರಾದ ಡಾ.ಜೆ.ಎನ್.ವೆಂಕಟೇಶ್, ಪತ್ರಕರ್ತ ಟಿ.ಗುರುರಾಜ್, ಮೈಸೂರು ಮಹರಾಜ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರೇಗೌಡ ಇತರರು ಇದ್ದರು.