ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ. ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಿರುವ ಎಸ್ಡಿಎಂ ಆಸ್ಪತ್ರೆ ಉಳಿದ ಖಾಸಗಿ ಆಸ್ಪತ್ರೆಗಳಿಗೆ ಮಾದರಿ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಸತ್ತೂರಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಆನ್ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ. ಸೋಂಕಿನ ಸರಪಳಿ ತುಂಡರಿಸಲು, ಪರಸ್ಪರ ಅಂತರ, ಮಾಸ್ಕ್ ಧರಿಸುವಿಕೆ ಜೊತೆಗೆ ಹೆಚ್ಚು ಪರೀಕ್ಷೆಗಳೂ ಆಗಬೇಕು ಎಂದರು.
ಗೂಗಲ್ ಮೀಟ್ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಒತ್ತಾಸೆಯಿಂದ ಎಸ್ಡಿಎಂ ವಿಶ್ವವಿದ್ಯಾಲಯದಲ್ಲಿ ಕೋವಿಡ್ ತಪಾಸಣೆ ಪ್ರಯೋಗಾಲಯ ಸ್ಥಾಪನೆಯಾಗಿದೆ. ಐಸಿಎಂಆರ್ ಹಾಗೂ ಎನ್ಎಬಿಎಲ್ ಮಾನ್ಯತೆ ಶೀಘ್ರ ದೊರಕಲು ಸಾಧ್ಯವಾಗಿದೆ. ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ವರ್ಗದವರ ಪರಿಶ್ರಮ ಶ್ಲಾಘನೀಯ ಎಂದರು.
ಎಸ್ಡಿಎಂ ವಿಶ್ವವಿದ್ಯಾಲಯದ ಉಪ ಕುಲಪತಿ, ಕಾಲೇಜು ನಿರ್ದೇಶಕ ಡಾ. ನಿರಂಜನಕುಮಾರ, ಪ್ರಾಚಾರ್ಯು ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಅಧೀಕ್ಷಕ ಡಾ. ಕಿರಣ ಹೆಗಡೆ, ಮೈಕ್ರೊಬಯಾಲಜಿ ವಿಭಾಗದ ಮುಖ್ಯಸ್ಥ ಡಾ. ಆರ್.ಡಿ. ಕುಲಕರ್ಣಿ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ ಕಲ್ಲಾಪುರ, ಇತರರಿದ್ದರು.