ದಾವಣಗೆರೆ: ಇಪ್ಪತ್ತೆರಡು ಕೆರೆಗಳ ಏತ ನೀರಾವರಿ ಯೋಜನೆಯಡಿ ಕಾಮಗಾರಿ ಕಳಪೆಯಾಗಿದ್ದು, ಕೆರೆಗಳು ಭರ್ತಿಯಾಗುತ್ತಿಲ್ಲ. ಹೀಗಾಗಿ ಮರುಕಾಮಗಾರಿ ನಡೆಸಿ ಕೆರೆ ತುಂಬಿಸಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ಮಾತನಾಡಿದ ಶಾಸಕರು, ಕಳಪೆ ಕಾಮಗಾರಿ ಪರಿಣಾಮವಾಗಿ ಮಾಯಕೊಂಡ ಕ್ಷೇತ್ರದ ಜನರು ಕುಡಿಯುವ ನೀರು, ರೈತರು ಬೆಳೆ ಬೆಳೆಯಲು ಪರಿತಪಿಸುವಂತಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಿ ಕೆರೆಗಳನ್ನು ತುಂಬಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಮಾಯಕೊಂಡ ಕ್ಷೇತ್ರದಲ್ಲಿ ರೈತರು ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುತ್ತಿದ್ದು, ವೈಜ್ಞಾನಿಕ ಬೆಲೆ ನೀಡಿ ಖರೀದಿಸಬೇಕು. ಈವರೆಗೂ ಕೇಂದ್ರ ಸರ್ಕಾರ ಮೆಕ್ಕೆಜೋಳವನ್ನು ಪಡಿತರ ವ್ಯವಸ್ಥೆಗೆ ತಂದಿಲ್ಲ. ಪಡಿತರ ವ್ಯವಸ್ಥೆಗೆ ತರಲು ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಕ್ಷೇತ್ರದ 180 ಗ್ರಾಮಗಳ ಜನರ ಆರೋಗ್ಯ ದೃಷ್ಟಿಯಿಂದ ಪೌರಕಾರ್ಮಿಕರನ್ನು ನೇಮಿಸಿ ಗ್ರಾಮೀಣ ಜನರ ಆರೋಗ್ಯ ಕಾಪಾಡಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್ನಲ್ಲಿ ಕಾಯ್ದೆಯ 7ಡಿ ಅನ್ನು ತೆಗೆದು ಹಾಕಿರುವುದರಿಂದ ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಅನುಕೂಲವಾಗಿದೆ ಎಂದು ಹೇಳಿದರು.
—