ಶಿಡ್ಲಘಟ್ಟ: ನಗರದ ಮಿನಿ ವಿಧಾನಸೌಧದ ಮುಂಭಾದಲ್ಲಿನ ಸರ್ಕಾರಿ ಜಾಗದಲ್ಲಿಯೇ ಅಂಬೇಡ್ಕರ್ ಭವನಕ್ಕೆ ಸ್ಥಳ ನೀಡುಬೇಕು ಹಾಗೂ 2021ರ ಏಪ್ರಿಲ್ 14ರೊಳಗೆ ಅಂಬೇಡ್ಕರ್ ಭವನ ಉದ್ಘಾಟಿಸಬೇಕು ಎಂದು ಆರ್ಪಿಐ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯ ಸಮತಾ ಸೈನಿಕ ದಳದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರ ರಸ್ತೆಯ ಮಾರಮ್ಮ ವೃತ್ತದ ಬಳಿ ಬುಧವಾರ ಸಮತಾ ಸೈನಿಕ ದಳದ ತಾಲೂಕು ಘಟಕದ ಕಚೇರಿ ಉದ್ಘಾಟಿಸಿ ಮಾತನಾಡಿದರು. ತಾಲೂಕು ಕೇಂದ್ರಸ್ಥಾನದಲ್ಲಿ ಇದುವರೆಗೂ ಅಂಬೇಡ್ಕರ್ ಭವನ ನಿರ್ಮಾಣ ಮಾಡದಿರುವುದು ವಿಪರ್ಯಾಸ. ಭವನ ನಿರ್ಮಾಣಕ್ಕೆ ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದರೆ ದಲಿತ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಪೌರಕಾರ್ಮಿಕರ ಹಿತಕಾಯುವಲ್ಲಿ ಎಡವಿದೆ, ಕರೊನಾದಿಂದ ಮೃತಪಟ್ಟ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ಮುಂದಾಗಬೇಕು ಆಗ್ರಹಿಸಿದರು.
ರಾಜ್ಯಪ್ರಧಾನ ಕಾರ್ಯದರ್ಶಿ ಲಯನ್ ಮಂಜುನಾಥ್, ಬೆಂಗಳೂರು ವಿಭಾಗೀಯ ಅಧ್ಯಕ್ಷ ಜಿಗಣಿ ನಾಗರಾಜ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಜಿ.ಸಿ ವೆಂಕಟರಮಣಪ್ಪ, ಜಿಲ್ಲಾ ಪ್ರಧಾನಕಾರ್ಯದರ್ಶಿ ಜೆ.ಅಶ್ವತ್ಥಪ್ಪ, ಉಪಾಧ್ಯಕ್ಷ ಈಶ್ವರಪ್ಪ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ಹರಿಪ್ರಸಾದ್, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಆಂಜಿನಪ್ಪ, ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಈಧರೆ ಪ್ರಕಾಶ್, ಗೌರವಾಧ್ಯಕ್ಷ ಮುನಿಆಂಜಿನಪ್ಪ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಖಜಾಂಚಿ ವೆಂಕಟೇಶಪ್ಪ ಇತರರಿದ್ದರು.