ಪಿರಿಯಾಪಟ್ಟಣ: ನಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ಒತ್ತಡದ ನಡುವೆ ನಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದೆ ಎಂದು ಶಾಸಕ ಕೆ.ಮಹದೇವ್ ಸಲಹೆ ನೀಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗ್ರಾಮೀಣ ದಸರಾ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ಮತ್ತು ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಒತ್ತಡದ ಜೀವನ ನಡೆಸುತ್ತಿರುವ ನಾವು ರೋಗಕ್ಕೆ ತುತ್ತಾಗುತ್ತಿರುವುದು ಸಹಜ. ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿಕೊಂಡು ಚಿಕಿತ್ಸೆಗೊಳಗಾದರೆ ಗುಣಪಡಿಸಲು ಸಾಧ್ಯವಿದೆ. ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆಯಲು ಇಂತಹ ಶಿಬಿರಗಳು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಟಿಎಚ್ಒ ಡಾ.ಶರತ್ ಬಾಬು ಮಾತನಾಡಿ ಸಮೀಕ್ಷೆಯ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ನೂರು ಜನರಲ್ಲಿ ಶೇ.23 ರಷ್ಟು ಅಧಿಕ ರಕ್ತದೊತ್ತಡ ಮತ್ತು ಶೇ.16 ರಷ್ಟು ಜನರಲ್ಲಿ ಸಕ್ಕರೆ ಕಾಯಿಲೆ ಪತ್ತೆಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಾಲೂಕಿನಲ್ಲಿ ಪತ್ತೆಯಾಗಿರುವ 60 ಕ್ಷಯ ರೋಗಿಗಳಿಗೆ ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆ ವತಿಯಿಂದ ಪ್ರೋಟಿನ್ ಪೌಡರ್ ಉಚಿತವಾಗಿ ವಿತರಿಸಲಾಯಿತು. ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆ ಅಧ್ಯಕ್ಷ ಕೆ.ರಮೇಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇವಿಕಾ, ಪುರಸಭೆ ಉಪಾಧ್ಯಕ್ಷೆ ಆಶಾ, ಸದಸ್ಯರಾದ ಪಿ.ಸಿ.ಕೃಷ್ಣ, ನಿರಂಜನ್,ಭಾರತಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಟಿ.ರಮೇಶ್, ಶುಭಾ, ನಿಜಾಮುದ್ದೀನ್, ಹರೀಶ್, ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಹೇಶ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಆರ್.ಪ್ರಕಾಶ್, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ ಮತ್ತಿತರರು ಹಾಜರಿದ್ದರು.