More

    ಓಬವ್ವಳನಾಡಿಗೆ ಇಂದು ಪ್ರಿಯಾಂಕಾ ಗಾಂಧಿ

    ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಏ.23ರ ಮಂಗಳವಾರ ಏರ್ಪಡಿಸಿರುವ ಪ್ರಚಾರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ‌್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
    ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
    ಕೋಮುವಾದಿ ಪಕ್ಷವೇ ಡೇಂಜರ್, ಭಾವನಾತ್ಮಕ ವಿಚಾರಗಳನ್ನು ಕೆದಕಿ ಎರಡು ಬಾರಿ ಸಫಲವಾಗಿರುವ ಬಿಜೆಪಿ 3ನೇ ಭಾರಿ ವಿಫಲವಾಗಲಿದೆ ಎಂದು ಹೇಳಿದರು.
    ಕಾಂಗ್ರೆಸ್ ಎಲ್ಲ ಜಾತಿ, ಧರ್ಮದವರಿಗೂ ನ್ಯಾಯ ಒದಗಿಸುತ್ತಿದೆ. ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಗ್ಯಾರಂಟಿಗಳಿಗೆ ಎಸ್‌ಸಿಎಸಪಿ, ಎಸ್‌ಟಿಪಿ ಅನುದಾನ ಬಳಕೆ ಆಗುತ್ತಿದೆ ಎಂಬ ಬಿಜೆಪಿಯ ಆರೋಪದಲ್ಲಿ ಹುರುಳಿಲ್ಲ ಎಂದರು.
    ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಪ್ರಿಯಾಂಕಾ ಗಾಂಧಿ ಅವರು ಲಕ್ಕಿ ಸ್ಟಾರ್. ಅವರು ಪ್ರಚಾರ ನಡೆಸಿದ ಸ್ಥಳಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ ಎಂದು ಹೇಳಿದರು.
    ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಹಕ್ಕಿದೆ. ಆರ್‌ಒ ಪ್ಲಾಂಟ್ ಬೇಕೆಂದು ಜಾನುಕೊಂಡ ಗ್ರಾಮಸ್ಥರು ತಮ್ಮನ್ನು ಒತ್ತಾಯಿಸಿದ್ದಾರೆ ಎಂದರು.
    ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿದರು. ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿ.ವಿ.ಮಧುಗೌಡ, ಎನ್.ಡಿ.ಕುಮಾರ್, ವಕೀಲ ರವಿಕುಮಾರ್, ಯಶವಂತ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts