ದಾವಣಗೆರೆ: ಕನ್ನಡಾಭಿಮಾನ ಬೆಳೆಸಿಕೊಳ್ಳುವುದೆಂದರೆ ಇತರೆ ಭಾಷೆಗಳನ್ನು ದ್ವೇಷಿಸಬೇಕೆಂಬ ಕಲ್ಪನೆ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಭಾಷಾವಾರು ಪ್ರಾಂತ್ಯ ರಚನೆಯಾಗಿದೆ. ಆಯಾ ರಾಜ್ಯದ ರಾಜ್ಯಭಾಷೆಯು ಈ ನೆಲದ ಸಾರ್ವಭೌಮ ಭಾಷೆ. ಇದನ್ನು ಸಂವಿಧಾನ ಅಂಗೀಕರಿಸಿದೆ. ಶಿಕ್ಷಣ ಕ್ಷೇತ್ರದಲ್ಲೂ ರಾಜ್ಯಭಾಷೆಯೆ ಸಾರ್ವಭೌಮ ಭಾಷೆಯೆ ಹೊರತು ಅನ್ಯ ಭಾಷೆಯಲ್ಲ ಎಂದು ಹೇಳಿದರು.
ಶಾಸಕ ಎಸ್.ಎ.ರವೀಂದ್ರನಾಥ್, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಎಸ್ಪಿ ಹನುಮಂತರಾಯ, ಎಡಿಸಿ ಪೂಜಾರ್ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ವಿಶೇಷ ಭೂ ಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಹಾಗೂ ಅಧಿಕಾರಿಗಳಿದ್ದರು. ಕರೊನಾ ಮಾರ್ಗಸೂಚಿಯಂತೆ ಸರಳ ಕಾರ್ಯಕ್ರಮ ಆಯೋಜನೆಯಾಗಿತ್ತು. ಸಾರ್ವಜನಿಕರು, ಶಾಲಾ ಮಕ್ಕಳು ಭಾಗವಹಿಸಲಿಲ್ಲ.