ದೇವನಹಳ್ಳಿ: ಜಿಲ್ಲಾ ಕಸಾಪ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡರಿಸಿ ಮಾ.20ರಂದು ದೊಡ್ಡಬಳ್ಳಾಪುರದ ಜಾಗೃತಿ ಭವನದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಬಿ.ಕೆ.ಶಿವಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೊಸ ಬದಲಾವಣೆಗಾಗಿ ಸಮನ್ವಯ ಸಮಿತಿ ರಚಿಸಿಕೊಂಡು ಸಮಿತಿ ನೆರವಿನಿಂದ ಕೃಷ್ಣಪ್ಪ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಚುನಾವಣೆಯಲ್ಲಿ ಗೆಲ್ಲಿಸಲಾಯಿತು. ಗೆದ್ದ ಬಳಿಕ ಅಧ್ಯಕ್ಷರು ಪರಿಷತ್ತಿನ ನಿಬಂಧನೆ ಗಾಳಿಗೆ ತೂರಿ ಪರಿಷತ್ತಿನ ಸದಸ್ಯರಲ್ಲದವರನ್ನು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಾಗಿ ಆಯ್ಕೆ ಮಾಡಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಕಸಾಪ ಹೊಸಕೋಟೆ ತಾಲೂಕು ನಿಕಟಪೂರ್ವ ಅಧ್ಯಕ್ಷ ಚೌಡೇಗೌಡ ಮಾತನಾಡಿ, ಹೊಸಕೋಟೆ ತಾಲೂಕಿಗೆ ಪರಿಷತ್ತಿನ ಸದಸ್ಯರಲ್ಲದವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಆರ್ಟಿಐ ಮೂಲಕ ಅರ್ಜಿ ಸಲ್ಲಿಸಿದ್ದರೂ ಉತ್ತರ ನೀಡಿಲ್ಲ. ಇದನ್ನು ಖಂಡಿಸಿ ರಾಜ್ಯ ಸಮಿತಿಗೆ ಪತ್ರ ಬರೆಯಲಾಗಿದೆ. ಪದಾಧಿಕಾರಿಗಳ ಆಯ್ಕೆ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದರು.
ಮುಖಂಡರಾದ ಹಾರೋಹಳ್ಳಿ ಸುಬ್ರಮಣಿ, ಮುನೇಗೌಡ, ವೆಂಕಟೇಶ್, ಗೋವಿಂದಸ್ವಾಮಿ, ಜಯಕುಮಾರ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.