ಶಿವಮೊಗ್ಗ: ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಬಗ್ಗೆ ಹಿಂದೂ ಜಾಗರಣಾ ವೇದಿಕೆ ನೀಡಿದ ಖಚಿತ ಮಾಹಿತಿ ಮೇರೆಗೆ ಏಳು ವಾಹನಗಳನ್ನು ತಡೆದು ತಪಾಸಣೆ ನಡೆಸಿದ ಶಿರಾಳಕೊಪ್ಪ ಠಾಣೆ ಪೊಲೀಸರು, 37 ಜಾನುವಾರುಗಳನ್ನು ವಶಕ್ಕೆ ಪಡೆದು 10 ಮಂದಿಯನ್ನು ಬಂಧಿಸಿದ್ದಾರೆ.
ಸೊರಬ ತಾಲೂಕಿನ ಉದುರಿ, ಅಂಕೂರು ಸೇರಿ ಸುತ್ತಮುತ್ತಲ ಗ್ರಾಮಗಳಿಂದ ಜಾನುವಾರುಗಳನ್ನು ಖರೀದಿಸಿ ನಾಲ್ಕು ಟಾಟಾ ಏಸ್, ಒಂದು ಬುಲೆರೋ ಪಿಕಪ್ ಸೇರಿ ಏಳು ವಾಹನಗಳಲ್ಲಿ 18 ಎಮ್ಮೆಗಳು ಸೇರಿ 37 ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದರು.
ಪುಣೇದಹಳ್ಳಿಯ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಜಾನುವಾರುಗಳ ಸಾಗಾಟದ ಬಗ್ಗೆ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದರು. ಜಾನುವಾರುಗಳ ಸಾಗಣೆ ಬಗ್ಗೆ ವಿಚಾರಣೆಗೆ ಒಳಪಡಿಸಿದಾಗ ಕಸಾಯಿ ಖಾನೆಗೆ ಸಾಗಿಸುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಾಲ್ಕು ಒಂಟೆಗಳ ವಶ: ಮತ್ತೊಂದು ಪ್ರಕರಣದಲ್ಲಿ ಅಶೋಕ ಲೈಲ್ಯಾಂಡ್ ವಾಹನದಲ್ಲಿ ಸಾಗಿಸುತ್ತಿದ್ದ ನಾಲ್ಕು ಒಂಟೆಗಳನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂಟೆಗಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಆರೋಪಿಗಳು ಬಿಟ್ಟುಕೊಟ್ಟಿಲ್ಲ. ಹಾಗಾಗಿ ಒಂಟೆಗಳನ್ನು ವಾಹನ ಸಮೇತ ವಶಕ್ಕೆ ಪಡೆಯಲಾಗಿದೆ.