ಮುಳಬಾಗಿಲು: ಸೇರ್ಪಡೆ ಕಾರ್ಯಕ್ರಮದಲ್ಲಿ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಕೂಡ ಇದ್ದು ತಾಂತ್ರಿಕ ಕಾರಣಗಳಿಂದ ಅವರ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಣೆ ಮಾಡದಿದ್ದರೂ, ಕೊತ್ತೂರು ಮಂಜುನಾಥ್ ಮತ್ತು ಡಾ.ಸುಧಾಕರ್ ಅವರಿಗೆ ಮುಳಬಾಗಿಲು ಮತ್ತು ಚಿಂತಾಮಣಿ ತಾಲೂಕಿನ ಕಾಂಗ್ರೆಸ್ ಟಿಕೆಟ್ ಸೇರಿ ಪಕ್ಷದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಆದ್ಯತೆ ನೀಡುವ ಭರವಸೆಯನ್ನು ಎಐಸಿಸಿ ವರಿಷ್ಠರು ನೀಡಿದ್ದಾರೆ ಎನ್ನಲಾಗಿದೆ.ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಹಾಗೂ ಚಿಂತಾಮಣಿಯ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ್ದಾರೆ. ದೆಹಲಿಯಲ್ಲಿ ಎಐಸಿಸಿ ವರಿಷ್ಠ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಬುಧವಾರ ಪಕ್ಷ ಸೇರಿದರು.
ಇದರಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಕೋಲಾರ, ಮುಳಬಾಗಿಲು ಚಿಂತಾಮಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿರುವುದು ಈ ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಇದಕ್ಕೆ ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ಸಿಂಗ್ ಸುರ್ಜೆವಾಲ ಸಹ ಒಪ್ಪಿಗೆ ಸೂಚಿಸಿದ್ದು ಜಿಲ್ಲೆಯಲ್ಲಿ ಮಾಜಿ ಸ್ಪೀಕರ್, ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್ ಕುಮಾರ್ ತಂಡ ಮೇಲುಗೈ ಸಾಧಿಸಿದಂತಾಗಿದೆ.
ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಎಂಎಲ್ಸಿಗಳಾದ ನಸೀರ್ಅಹ್ಮದ್, ಎಂ.ಎಲ್.ಅನಿಲ್ಕುಮಾರ್ ಅವರು ಮಂಜುನಾಥ್, ಸುಧಾಕರ್ ಸೇರ್ಪಡೆಗೆ ಸಾಥ್ ನೀಡಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಿಂತಾಮಣಿ, ಕೋಲಾರದಲ್ಲಿ ಜೆಡಿಎಸ್ ಶಾಸಕರಿದ್ದರೆ ಮುಳಬಾಗಿಲಿನಲ್ಲಿ ಕಾಂಗ್ರೆಸ್ ಬೆಂಬಲದಿಂದ ಪೇತರವಾಗಿ ಗೆದ್ದ ಎಚ್.ನಾಗೇಶ್ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ. ಈ 3 ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರೇ ಇದ್ದು ಮುಂದಿನ ವಿಧಾನಸಭಾ ಚುನಾವಣೆಗೆ ಈ ಕ್ಷೇತ್ರಗಳಿಗೆ ಈಗಿನಿಂದಲೇ ತಯಾರಿಗೆ ಕಾಂಗ್ರೆಸ್ ಮುಂದಾಗಿದೆ.