More

    ಕಾನನ ರಕ್ಷಣೆಗೆ ಪ್ರಾಣ ಒತ್ತೆ ಇಟ್ಟು ಸೇವೆ : ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ ಮೂರ್ತಿ ಅಭಿಮತ


    ಮಡಿಕೇರಿ : ಅರಣ್ಯ ಸಂಪತ್ತು ಹಾಗೂ ಜೀವ ಸಂಕುಲಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಣ ಒತ್ತೆ ಇಟ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ ಮೂರ್ತಿ ಹೇಳಿದರು.

    ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಯಿಂದ ನಗರದ ಅರಣ್ಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಮಾತನಾಡಿದರು.


    ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಹೆಚ್ಚಿನ ಹೊಣೆಗಾರಿಕೆ ಜತೆಗೆ ಕಠಿಣ ಸವಾಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿ ಅರಣ್ಯ ರಕ್ಷಣೆ ಮಾಡುವತ್ತ ವಿಶೇಷ ಗಮನ ಹರಿಸುತ್ತಾರೆ ಎಂದರು.
    ದೇಶದ ರಕ್ಷಣೆ, ಅರಣ್ಯ ಸಂರಕ್ಷಣೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸೈನಿಕರು, ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಮವಸ್ತ್ರ ಧರಿಸಿ ಕಾರ್ಯನಿರ್ವಹಿಸುತ್ತಾರೆ. ಈ ಮೂರು ಕ್ಷೇತ್ರದಲ್ಲಿಯೂ ಸಮಾಜದ ರಕ್ಷಣೆ, ಹೊಣೆಗಾರಿಕೆ ಹೆಚ್ಚಿನದ್ದಾಗಿದೆ ಎಂದು ನಿರಂಜನಮೂರ್ತಿ ನುಡಿದರು.

    ಮಳೆಗಾ ಕಾಡು ಬೇಕೆ ಬೇಕು :
    ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ, ಅರಣ್ಯ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಪ್ರಸ್ತುತ ದಿನದಲ್ಲಿ ಅರಣ್ಯದ ಮಹತ್ವ ಪ್ರತಿಯೊಬ್ಬರಿಗೂ ತಿಳಿದಿದೆ. ಸರಿಯಾದ ಸಮಯಕ್ಕೆ ಮಳೆ ಬರಬೇಕಾದರೆ ಕಾಡಿನ ಅವಶ್ಯಕತೆ ಬಹಳ ಮುಖ್ಯ ಎಂದರು. ಉತ್ತಮ ಮಳೆಯಾದರೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು. ಕುಡಿಯಲು ನೀರು ಹಾಗೂ ಶುದ್ಧ ಗಾಳಿ ಪರಿಸರದಿಂದ ಸಿಗುತ್ತದೆ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕೆಂದರು.


    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಮಾತನಾಡಿ, ಅರಣ್ಯ ಸಂಪತ್ತಿನ ರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ವೈಖರಿ ಪ್ರಸಂಶನೀಯ. ಅರಣ್ಯ ಇಲಾಖೆ ಅವರ ಕಾರ್ಯ ವೈಖರಿ ಪ್ರತಿಯೊಬ್ಬರೂ ಅರಿಯಬೇಕೆಂದರು.


    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಮಾತನಾಡಿ, ಅರಣ್ಯ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ನೆನೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.


    ಜಾಗತಿಕ ಬೆಳವಣಿಗೆಯಿಂದ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಅರಣ್ಯ ಸಂರಕ್ಷಣೆ ಜತೆಗೆ ಪ್ರಾಣಿ ಸಂಕುಲದ ಸಂರಕ್ಷಣೆ ಸಹ ಮಾಡಬೇಕಾಗಿದೆ. ಜೀವೈವಿಧ್ಯತೆ ಕಾಪಾಡಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.


    ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಮಾತನಾಡಿ, ಅರಣ್ಯ ಇಲಾಖೆಯವರು ಅರಣ್ಯ, ಜೀವ ಸಂಕುಲ ಹಾಗೂ ಮನು ಸಂಕುಲಗಳ ರಕ್ಷಣೆ ಮಾಡುತ್ತಾರೆಂದರು.


    ಉಸಿರಾಡುವ ಗಾಳಿ ಹಾಗೂ ಕುಡಿಯುವ ನೀರಿನ ಮೂಲವೇ ಅರಣ್ಯ. ಅರಣ್ಯ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯವರು ಮುಂಚೂಣಿಯಲ್ಲಿದ್ದಾರೆಂದರು.
    ಅರಣ್ಯದಲ್ಲಾಗುವ ಕೆಲವೊಂದು ಘಟನೆಗಳಿಂದ ಅರಣ್ಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದವರನ್ನು ಎಲ್ಲರೂ ಸ್ಮರಿಸಬೇಕು. ಅರಣ್ಯ ಸಂರಕ್ಷಿಸಿ ಮುಂದಿನ ಪೀಳಿಗೆಯವರಿಗೂ ಹಸಿರಾದ ಪರಿಸರ ನೀಡುವ ಕೆಲಸಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.


    ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ತಮ್ಮ ಪ್ರಾಣ ಒತ್ತೆ ಇಟ್ಟು ಅರಣ್ಯ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆಂದರು.


    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್, ಕಳೆದ 56 ವರ್ಷಗಳಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದವರ (1966 ರಿಂದ 2022) ಪಟ್ಟಿ ಹಾಗೂ ಅರಣ್ಯ ಇಲಾಖೆಯ ಪಕ್ಷಿ ನೋಟ ಓದಿದರು.


    ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನಮೂರ್ತಿ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ. ಜಿಪಂ ಸಿಇಒ ಭನ್ವರ್ ಸಿಂಗ್ ಮೀನಾ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ’ಅರಣ್ಯ ಹುತಾತ್ಮರ ಸ್ಮಾರಕ’ಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ನಮನ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts