More

    ಕಾರ್ಮಿಕರು ಯೋಜನೆಗಳ ಲಾಭ ಪಡೆಯಲಿ – ಜಿಲ್ಲಾ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿಕೆ – ಕಾನೂನು ಅರಿವು ಕಾರ್ಯಕ್ರಮ 

    ದಾವಣಗೆರೆ: ಸಾಮಾಜಿಕ ಭದ್ರತೆಗಾಗಿ ಜಾರಿಗೆ ತರಲಾದ ಹಲವು ಕಾಯ್ದೆಗಳು ಮತ್ತು ಯೋಜನೆಗಳ ಲಾಭವನ್ನು ಅಸಂಘಟಿತ ಕಾರ್ಮಿಕರು ಒಗ್ಗೂಡಿ ಪಡೆಯಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
    ಆವರಗೆರೆಯ ಪಿ.ಬಸವನಗೌಡ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಹಾಗೂ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಭಾರತದಲ್ಲಿ ಶೇ. 90ಕ್ಕೂ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಉದ್ಯೋಗಿಗಳಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೃಷಿ ಕಾರ್ಮಿಕರು, ಕಟ್ಟಡ ಗುತ್ತಿಗೆದಾರರು, ಗೃಹ ಕೆಲಸ ಮತ್ತು ಸಣ್ಣ ಪ್ರಮಾಣದ ಉದ್ಯಮಗಳು ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಈ ವರ್ಗದಲ್ಲಿದ್ದಾರೆ ಎಂದರು. 2008ರ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯು ವಿವಿಧ ಸೌಲಭ್ಯಗಳನ್ನು ಒದಗಿಸಿದೆ ಎಂದು ತಿಳಿಸಿದರು.
    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, ಕೃಷಿ ಕಾರ್ಮಿಕರು ಇ-ಶ್ರಮ ಕಾರ್ಡ್‌ಗಳನ್ನು ನೊಂದಣಿ ಮಾಡಿಸಿಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು. ದೇಶದ ಪ್ರಗತಿಗೆ ಅಸಂಘಟಿತ ಕಾರ್ಮಿಕರ ಶ್ರಮವೂ ಕಾರಣವಾಗಿದ್ದು, ಅವರ ಶ್ರಮಕ್ಕೆ ತಕ್ಕಂತೆ ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
    ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಮಾತನಾಡಿ, ಕಾರ್ಮಿಕ ಇಲಾಖೆಯು ಜನರ ಮನೆಬಾಗಿಲಿಗೆ ಸರ್ಕಾರದ ೋಜನೆಗಳ ಬಗ್ಗೆ ಅರಿವು ಮೂಡಿಸಿ, ನೊಂದಣಿ ಮಾಡಿಸಿ, ಫಲಾನುಭವಿಗಳಾಗಲು ಶ್ರಮಿಸುತ್ತಿರುವುದು ಗಮನಾರ್ಹ ಎಂದು ಹೇಳಿದರು.
    ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಎಚ್.ಜಿ. ಉಮೇಶ್ ಅವರು ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ ವಿತರಣೆ ಮೂಲಕ ಸಮಸಮಾಜದ ಆಶಯವನ್ನು ಸಾಕಾರಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
    ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘ ಹಾಗೂ ಎಐಟಿಯುಸಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಸಮಾರಂಭದಲ್ಲಿ ಜಿಲ್ಲಾ ವಕೀಲರ ಸಂಘದ ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಮಾಜಿ ಮೇಯರ್ ಜಯಮ್ಮ ಗೋಪಿನಾಥ್, ಕರ್ನಾಟಕ ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ವಿ. ಲಕ್ಷ್ಮ್ಮಣ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂಸಾಬ್ ಮಾತನಾಡಿದರು.
    ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಎಸ್.ಆರ್.ವೀಣಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜುನಾಥ್, ವಕೀಲರಾದ ಡಿ.ಎಸ್. ವಿಜಯಕುಮಾರ್, ಮನೋಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts