More

    ಕೋವಿಡ್ ಕೇಂದ್ರಗಳಿಗೆ ಸಕಲ ಸೌಲಭ್ಯ ಕೊಡಿ ; ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ

    ತುಮಕೂರು: ಕೋವಿಡ್ ಕೇರ್ ಕೇಂದ್ರಗಳಲ್ಲಿ ಸೋಂಕಿತರಿಗೆ ಬಿಸಿ ಆಹಾರ, ತಾಜಾ ಹಣ್ಣಿನ ಜತೆಗೆ ಸಕಲ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್ ಹಾಗೂ ಹೇಮಾವತಿ ನೀರು ಹಂಚಿಕೆ ಸಂಬಂಧಿಸಿದಂತೆ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ರೋಗಿಗಳಿಗೆ ಉತ್ತಮ ಸೌಲಭ್ಯ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು ಮೇಲಧಿಕಾರಿಗಳು ಸರಿಯಾಗಿ ಉಸ್ತುವಾರಿ ವಹಿಸಬೇಕು ಎಂದರು.

    ವೈದ್ಯಕೀಯ ಸೌಲಭ್ಯ, ಆಸ್ಪತ್ರೆಗಳು ಹತ್ತಿರ ಇರುವ ಹಾಗೂ ಮನೆಯಲ್ಲಿಯೇ ಸೌಕರ್ಯವಿರುವ ಸೋಂಕಿತರು ಬಯಸಿದ್ದಲ್ಲಿ ಹೋಮ್ ಐಸೋಲೇಷನ್​ಗೆ ಅವಕಾಶ ನೀಡಿ, ಹೃದಯಾಘಾತ ಸೇರಿ ಕೋವಿಡ್ ಹೊರತಾದ ಕಾರಣಗಳಿಂದ ಮೃತಪಟ್ಟರೆ ಮೃತದೇಹಗಳನ್ನು ಕುಟುಂಬಸ್ಥರಿಗೆ ವಿಳಂಬ ಮಾಡದೆ ಹಸ್ತಾಂತರಿಸಬೇಕು ಎಂದು ಹೇಳಿದರು. ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಕೇಂದ್ರಕ್ಕೆ ಆಗ್ಗಿಂದಾಗ್ಗೆ ಡಿಎಚ್​ಒ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ, ಸೋಂಕಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಗುತ್ತಿದೆ. ತಾಜಾ ಆಹಾರ ಒದಗಿಸಲಾಗುತ್ತಿದ್ದು ಅದೇ ಆಹಾರವನ್ನು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಸೇವಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ 144 ಸರ್ಕಾರಿ ಆಸ್ಪತ್ರೆಗಳಿದ್ದು, ರ್ಯಾಪಿಡ್ ಆಂಟಿಜನ್ ಟೆಸ್ಟ್​ಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ರೋಗಲಕ್ಷಣವನ್ನು ಆರಂಭದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಸೋಂಕು ಕಂಡು ಬಂದ ರೋಗಿಗಳಿಗೆ ಹೆಚ್ಚಿನ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸೋಂಕಿತರು ತಡವಾಗಿ ಆಸ್ಪತ್ರೆಗಳಿಗೆ ಬರುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ, ಇಲ್ಲಿಯವರೆಗೂ ಜಿಲ್ಲೆಯಲ್ಲಿ ಆಗಿರುವ ಹೆಚ್ಚಿನ ಕರೊನಾ ಸಾವಿನ ಪ್ರಕರಣಗಳು ಆಸ್ಪತ್ರೆಗೆ ವಿಳಂಬವಾಗಿ ಬಂದವರದಾಗಿವೆ. ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಆಗಮಿಸಿ ಸೂಕ್ತ ಪರೀಕ್ಷೆ ಹಾಗೂ ಚಿಕಿತ್ಸೆ ಪಡೆದರೆ ಸಾವಿನ ಸಂಖ್ಯೆ ಕಡಿಮೆ ಮಾಡಬಹುದು ಎಂದರು.

    ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ತುಮಕೂರು ನಗರದ ಖಾಸಗಿ ಆಸ್ಪತ್ರೆಗಳಿಂದ 694 ಹಾಸಿಗೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಲಭ್ಯವಾಗಲಿದ್ದು ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಸಿದ್ಧರಿದ್ದಾರೆ. ಪ್ರತಿನಿತ್ಯ ಜಿಲ್ಲೆಯಲ್ಲಿ 1400 ಪರೀಕ್ಷೆ ಮಾಡಲಾಗುತ್ತಿದೆ ಎಂದರು.

    ಜಿಪಂ ಸಿಇಒ ಶುಭಾಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಟಿ.ಜೆ.ಉದೇಶ್, ಉಪವಿಭಾಗಾಧಿಕಾರಿಗಳಾದ ಅಜಯ್, ಡಾ.ನಂದಿನಿದೇವಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಾ.ಚೇತನ್ ಮತ್ತಿತರರ ಅಧಿಕಾರಿಗಳು ಇದ್ದರು.

    ಕೆರೆಗಳಿಗೆ ಸಂಸ್ಕರಿತ ಕೊಳಚೆ ನೀರು: ಬೆಂಗಳೂರಿನಲ್ಲಿ ನಿತ್ಯ ಉತ್ಪತ್ತಿಯಾಗುವ ಕೊಳಚೆ ನೀರು ಶುದ್ಧೀಕರಿಸಿ ದಾಬಸ್​ಪೇಟೆ ಕೈಗಾರಿಕಾ ಪ್ರದೇಶಕ್ಕೆ ಉಪಯೋಗಕ್ಕೆ ನೀಡಲು ಸರ್ಕಾರ ಚಿಂತಿಸಿದ್ದು ಯೋಜನೆ ತಯಾರಾಗುತ್ತಿದೆ. ತುಮಕೂರು ಗ್ರಾಮಾಂತರದ 8 ರಿಂದ 10 ಕೆರೆಗಳಿಗೆ ಟ್ರೀಟೆಡ್ ನೀರು ಹರಿಸುವ ಸಂಬಂಧ ಸಾಧ್ಯತೆ ಇರುವ ಕೆರೆಗಳ ಬಗ್ಗೆ ಮಾಹಿತಿ ನೀಡಿ ಎಂದು ನೀರಾವರಿ ಇಲಾಖೆ ಇಂಜಿನಿಯರ್​ಗಳಿಗೆ ಸಚಿವ ಮಾಧುಸ್ವಾಮಿ ಸೂಚಿಸಿದರು. ಶಿರಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಶಿರಾ ಕೆರೆಗೆ ವೇಳಾಪಟ್ಟಿಯಂತೆ ನೀರು ಹರಿಸುವಂತೆ ಹೇಮಾವತಿ ನಾಲಾ ಇಂಜಿನಿಯರ್ ಬಾಲಕೃಷ್ಣಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಮಿತಿಮೀರುತ್ತಿದೆ. ಈ ಸಂದರ್ಭದಲ್ಲಿ ಮತ್ತಷ್ಟು ಪರೀಕ್ಷೆಗಳನ್ನು ನಡೆಸುವ ಅವಶ್ಯಕತೆಯಿದೆ, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ದಾಖಲಾಗುವ ರೋಗಿಗಳಿಗೆ ಬಿಸಿಯೂಟ ಹಾಗೂ ತಾಜಾ ಹಣ್ಣು ಸೇರಿ ಅಗತ್ಯ ಸೌಲಭ್ಯ ನೀಡಬೇಕು. ಜಿಲ್ಲಾಧಿಕಾರಿ, ಡಿಎಚ್​ಒ ಖುದ್ದು ಮುತುವರ್ಜಿ ವಹಿಸಬೇಕು.

    ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವ, ತುಮಕೂರು

    ತಾಲೂಕು ಆಸ್ಪತ್ರೆಗಳಲ್ಲಿ ಹೈಫ್ಲೋ ಆಕ್ಸಿಜನ್ ಪೂರೈಕೆ ಮಾಡುವ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದು, ಆಕ್ಸಿಜನ್ ಪೂರೈಕೆ ಅಳವಡಿಸುವ ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಸಿಲಿಂಡರ್​ಗಳಿಗೆ, ಅನುದಾನಕ್ಕೆ ಕೊರತೆಯಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಸೋಂಕಿತರ ದಾಖಲಾತಿ ಸಂಬಂಧ ಕಂಟ್ರೋಲ್ ರೂಂ ಸ್ಥಾಪಿಸುತ್ತಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿ ನೇಮಿಸಲಾಗುವುದು.

    ಡಾ.ಕೆ.ರಾಕೇಶ್​ಕುಮಾರ್ ಜಿಲ್ಲಾಧಿಕಾರಿ, ತುಮಕೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts