ಹನಗೋಡು: ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸಮೀಪದ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದರು.
ಶಾಲಾ ಮುಖ್ಯಶಿಕ್ಷಕ ಕುಮಾರಸ್ವಾಮಿ ಮಾತನಾಡಿ, ಡಾ.ಬಿ ಆರ್.ಅಂಬೇಡ್ಕರ್ ಅವರು ನ್ಯಾಯಶಾಸ್ತ್ರಜ್ಞ ಹಾಗೂ ಅರ್ಥ ಶಾಸ್ತ್ರಜ್ಞರಾಗಿದ್ದು, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದರು.
ಅಸಮಾನತೆಯೇ ಮೇಳೈಸುತ್ತಿದ್ದ ಕಾಲದಲ್ಲಿ ಸ್ವತಃ ಅನುಭವಿಸಿದ್ದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದೆನ್ನುವ ದೃಷ್ಟಿಯಿಂದ ಅಂಬೇಡ್ಕರ್ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು. ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿದರು ಎಂದು ತಿಳಿಸಿದರು. ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.