ಪಿರಿಯಾಪಟ್ಟಣ: ತಾಲೂಕು ಹಾಗೂ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಗಾಳಿ ಸಹಿತ ಮಳೆಗೆ ಕೆಲವೆಡೆ ಬೆಳೆ ಹಾನಿಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ.
ಸಂಜೆ 4 ಗಂಟೆಗೆ ಗಾಳಿ ಸಹಿತ ಆರಂಭಗೊಂಡ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ರಭಸವಾಗಿ ಸುರಿದಿದ್ದರಿಂದ ಪಟ್ಟಣದ ಹಲವೆಡೆ ನೀರು ನುಗ್ಗಿ ಆತಂಕದ ವಾತಾವರಣ ಸೃಷ್ಟಿಸಿತ್ತು. ಹೆಮ್ಮಿಗೆ ಗ್ರಾಮದ ಬಳಿ ಇರುವ ಕೆ.ಜಿ.ಕೋಡಿಹಳ್ಳಿ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಹತ್ತಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದ್ದ ತಂಬಾಕು ಬೆಳೆ ಮತ್ತು ಶುಂಠಿ ಮತ್ತಿತರ ಬೆಳೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.
ಹಬಟೂರು ಗ್ರಾಮದಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬ ಮರಿದು ಬಿದ್ದಿದ್ದು, ಆ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಪಟ್ಟಣದ ಗ್ರಾಮಾಂತರ ಪೊಲೀಸ್ ಕಚೇರಿಯ ಆವರಣಕ್ಕೆ ನೀರು ನುಗ್ಗಿದ್ದು, ಇನ್ಸ್ಪೆಕ್ಟರ್ ಪ್ರಕಾಶ್ ಜೆಸಿಬಿ ತರಿಸಿ ನೀರು ಹೊರಗಡೆ ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಂಡರು. ಬೆಟ್ಟದಪುರ ರಸ್ತೆಯಲ್ಲಿ ಮಂಡಿಯುದ್ದ ನೀರು ನಿಂತು ಸಾರ್ವಜನಿಕರು ಸಂಚರಿಸಲು ಪರದಾಡುವಂತಾಯಿತು.