ಹಾಸನ: ಲೋಕಸಭಾ ಚುನಾವಣೆ ನಿಮಿತ್ತ ಚೆಕ್ಪೋಸ್ಟ್ಗಳಲ್ಲಿ ವಾಹನ ತಪಾಸಣೆಗೆ ನಿಯೋಜಿಸಿದ್ದ ಸಿಬ್ಬಂದಿ ಮೊಬೈಲ್ ನೋಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಗುರುವಾರ ಎಂಟು ನೌಕರರಿಗೆ ನೋಟಿಸ್ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನಲೆ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿಯಾಗಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ.50 ಸಾವಿರಕ್ಕಿಂತ ಅಧಿಕ ಹಣವನ್ನು ದಾಖಲೆ ಇಲ್ಲದೆ ಕೊಂಡೊಯ್ಯುವುದು ಅಪರಾಧವಾಗಿದೆ. ಇಂತಹ ಸಂದರ್ಭದಲ್ಲಿ ಚೆಕ್ಪೋಸ್ಟ್ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸಿದ್ದಕ್ಕೆ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ.
ಚನ್ನರಾಯಪಟ್ಟಣ, ಅರಕಲಗೂಡು ತಾಲ್ಲೂಕಿನ ಗಡಿ ಭಾಗಗಳಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಕೆಲಹೊತ್ತು ದೂರದಲ್ಲಿ ನಿಂತು ಚೆಕ್ಪೋಸ್ಟ್ನಲ್ಲಿ ಕಾರ್ಯ ನಿರ್ವಹಿಸುವವರ ಕಾರ್ಯವೈಖರಿ ಗಮನಿಸಿದರು. ಈ ವೇಳೆ ನಿಯೋಜಿತ ಸಿಬ್ಬಂದಿ ವಾಹನ ತಪಾಸಣೆ ಮಾಡುವ ಬದಲಾಗಿ ತಮ್ಮ ಮೊಬೈಲ್ಗಳನ್ನು ನೋಡುತ್ತಾ ಗಮನ ಬೇರೆಡೆಗೆ ಹರಿಸಿದ್ದುದು ಕಂಡುಬಂದಿದೆ. ಕೂಡಲೇ ಚೆಕ್ಪೋಸ್ಟ್ಗೆ ತೆರಳಿದ ಜಿಲ್ಲಾಧಿಕಾರಿ, ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ತಕ್ಷಣವೇ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮುಂದೆ ಈ ರೀತಿಯ ತಪ್ಪುಗಳು ಮರುಕಳಿಸಿದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ ಹಾಗು ಇತರರಿದ್ದರು.