ಚಾಮರಾಜನಗರ : ಕ್ಷೇತ್ರದಲ್ಲಿ ಸಾಕಾಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರ ಮೂಲಕ ಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿ.ಕೆ.ಹೊಸೂರು ಗ್ರಾಮದಲ್ಲಿ ಶನಿವಾರ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಹನೂರು ಕಾಂಗ್ರೆಸ್ನ ಭದ್ರಕೋಟೆ. ಹಾಗಾಗಿ ನನ್ನ ಅಧಿಕಾರವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಪ್ರೀತಿ, ವಿಶ್ವಾಸ 3 ಬಾರಿ ಗೆಲ್ಲಲು ಕಾರಣವಾಯಿತು. ನಿಮ್ಮ ವಿಶ್ವಾಸಕ್ಕೆ ಸದಾ ಋಣಿ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಿದ್ದರು. ಈ ದಿಸೆಯಲ್ಲಿ ಸಮುದಾಯ ಭವನ, ರಸ್ತೆ ಅಭಿವೃದ್ಧಿ, ಶಾಲಾ, ಕಾಲೇಜು, ಹಾಸ್ಟೆಲ್ ಸ್ಥಾಪನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂದರು.
ಇತ್ತೀಚೆಗೆ ರಾಜಕೀಯ ಉದ್ದೇಶದಿಂದ ಹನೂರು ಕ್ಷೇತ್ರಕ್ಕೆ ಆಗಮಿಸಿರುವ ಕೆಲವರಿಗೆ ಈ ಬಗ್ಗೆ ತಿಳಿದಿಲ್ಲ. ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಇದಕ್ಕೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
20 ವರ್ಷ ಬಾಳಿಕೆ ಬರಬೇಕು:
ಕಳೆದ ಅವಧಿಯಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಗಿರಿಜನರ ಹಾಡಿಗಳು ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗಿತ್ತು. ಆದರೆ, ಅನುದಾನದ ಕೊರತೆಯಿಂದ ಕೆಲ ಗ್ರಾಮದ ಕಾಲನಿಗಳಲ್ಲಿ ನಿರ್ಮಿಸಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ 3 ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ನೀಡಲಿಲ್ಲ. ಆದರೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ವಿವಿಧ ಇಲಾಖೆಯ ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ. ಆದ್ದರಿಂದ ಕಾಮಗಾರಿಯ ಜವಾಬ್ದಾರಿ ಹೊತ್ತವರು ಗುಣಮಟ್ಟ ಕಾಯ್ದುಕೊಳ್ಳುವುದರ ಮೂಲಕ ಕನಿಷ್ಠ 20 ವರ್ಷ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಗ್ರಾಪಂ ಸದಸ್ಯರಾದ ಪ್ರಕಾಶ್, ರಾಜಣ್ಣ, ಗೋವಿಂದರಾಜು, ಮುಖಂಡರಾದ ಜಿ.ಕೆ ಹೊಸೂರಿನ ಮಹದೇವಸ್ವಾಮಿ, ಶಿವಪುರದ ಲೋಕೇಶ್, ಮಹದೇವಪ್ಪ, ಕೆಂಚೇಗೌಡ, ಮರಿಲಿಂಗನಾಯ್ಕ, ಶ್ರೀಕಂಠಸ್ವಾಮಿ, ಸಿದ್ದಪ್ಪ, ಪಾಪಣಮ್ಮ ಇದ್ದರು.