More

    ಜುಲೈನಲ್ಲಿ ಕುವೆಂಪು ವಿವಿ ಘಟಿಕೋತ್ಸವ

    ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ಆಯೋಜನೆಗೆ ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿ ಅನುಮತಿ ನೀಡಿದರೆ ಜುಲೈ 28 ಅಥವಾ 29ರಂದು ಆಂತರಿಕವಾಗಿ ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.

    ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್​ನಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಕರೊನಾ ಕಾರಣದಿಂದ ವಿಳಂಬವಾಗಿದೆ. ವಿಶ್ವವಿದ್ಯಾಲಯದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯಿ ವಾಲಾ, ಸರ್ಕಾರದ ಮಾರ್ಗದರ್ಶಿ ಸೂತ್ರದನ್ವಯ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ಈ ತಿಂಗಳ ಅಂತ್ಯದೊಳಗೆ ಘಟಿಕೋತ್ಸವ ಆಯೋಜಿಸಲು ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಿಳಿಸಿದ್ದಾರೆ.

    ಕುಲಸಚಿವರಾದ ಪೊ›. ಎಸ್.ಎಸ್. ಪಾಟೀಲ್(ಆಡಳಿತ) ಪೊ›. ಎಂ ವೆಂಕಟೇಶ್ವರಲು (ಪರೀಕ್ಷಾಂಗ) ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೇಶ್ ಬಾಬು, ರಾಮಲಿಂಗಪ್ಪ, ಎಸ್. ಆರ್. ನಾಗರಾಜ್, ಕಿರಣ್ ದೇಸಾಯಿ ಸಿಂಡಿಕೇಟ್ ಸಭೆಯಲ್ಲಿ ಭಾಗವಹಿಸಿದ್ದರು.

    ಇನ್ ಹೌಸ್ ಮಾದರಿ: ಕರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವ ಕಾರಣ ಜಿಲ್ಲಾಧಿಕಾರಿ ಅನುಮತಿ ನೀಡಿದರೆ ಇನ್ ಹೌಸ್ ಮಾದರಿಯಲ್ಲಿ (ಆಂತರಿಕವಾಗಿ) ಘಟಿಕೋತ್ಸವ ಆಯೋಜಿಸಲಾಗುವುದು. ಸುಮಾರು 1000 ಆಸನಗಳ ಸಾಮರ್ಥ್ಯದ ವಿವಿಯ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ವಯ ಘಟಿಕೋತ್ಸವ ನಡೆಸಲಾಗುವುದು ಎಂದು ಪ್ರೊ. ಬಿ.ಪಿ. ವೀರಭದ್ರಪ್ಪ ತಿಳಿಸಿದ್ದಾರೆ.

    ರ್ಯಾಂಕ್​ವಿಜೇತರು, ಪಿಎಚ್​ಡಿ., ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿವಿ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

    ಜೇಷ್ಠತಾ ಪಟ್ಟಿಗೆ ಸಭೆ ಅನುಮೋದನೆ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಧ್ಯಾಪಕೇತರ ನೌಕರರ ಜೇಷ್ಠತೆಗೆ ಸಂಬಂಧಿಸಿದಂತೆ, ಜನವರಿ 20, 2020ರಂದು ಅಂತರ್ಜಾಲದಲ್ಲಿ ಪ್ರಕಟಿಸಿದ ಜೇಷ್ಠತಾ ಪಟ್ಟಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ತೀರ್ವನಿಸಲಾಯಿತು. ಜೊತೆಗೆ ಇದಕ್ಕೆ ಸಂಬಂಧಿಸಿದ ಬಡ್ತಿ ಮತ್ತು ವೇತನ ಸವಲತ್ತುಗಳನ್ನು ಸಹ ಅತಿ ತುರ್ತು ಎಂದು ಪರಿಗಣಿಸಿ ಕೂಡಲೇ ಅರ್ಹ ಸಿಬ್ಬಂದಿಗೆ ಒದಗಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು ಎಂದು ಕುಲಪತಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts