ಅರಸೀಕೆರೆ: ರಾಜ್ಯ ಶಿಕ್ಷಣ ನೀತಿಯ ತರಾತುರಿಯ ಅನುಷ್ಠಾನ ಶೈಕ್ಷಣಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಕಳವಳ ವ್ಯಕ್ತಪಡಿಸಿದರು.
ನಗರದ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪೂರ್ವ ಸಿದ್ಧತೆಯಿಲ್ಲದೆ ಎನ್ಇಪಿ ಜಾರಿಗೊಳಿಸಿದ್ದರ ಹೊಡೆತದಿಂದಲೇ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿ ಸಮುದಾಯ ಇನ್ನೂ ಹೊರಬಂದಿಲ್ಲ. ಇದರ ನಡುವೆ ಎಸ್ಇಪಿ ಮಾಡಲು ಹೊರಟಿರುವುದು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುವ ಅಪಾಯವಿದೆ. ಸರ್ಕಾರಗಳು ತೆಗೆದುಕೊಳ್ಳುವ ನೀತಿ, ನಿಲುವುಗಳು ವಿದ್ಯಾರ್ಥಿ ಸಮುದಾಯ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಮಾರಕವಾಗಲಿದೆ. ಆದ್ದರಿಂದ ಶಿಕ್ಷಣ ನಿಯಮಾವಳಿ ರೂಪಿಸುವಾಗ ಸರ್ಕಾರಗಳು ಬದ್ಧತೆ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ತರಳಬಾಳು ಹಿರಿಯ ಜಗದ್ಗುರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಹೆಣ್ಣು ಮಕ್ಕಳ ವ್ಯಾಸಂಗಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕೇಂದ್ರ ಸಲಹಾ ಸಮಿತಿ ಸದಸ್ಯ ಎಚ್.ಜಿ.ರೇವಣ್ಣ, ಉಪಾಧ್ಯಕ್ಷ ವೈ.ಎಸ್.ವೀರಭದ್ರಪ್ಪ, ಅನುಭವ ಮಂಟಪ ಶಾಲೆ ಅಧ್ಯಕ್ಷ ಮಹಾಲಿಂಗಸ್ವಾಮಿ, ಪ್ರಾಂಶುಪಾಲ ವಸಂತಕುಮಾರ್ ಮಾತನಾಡಿದರು. ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರಬಾಬು, ಸಲಹಾ ಸಮಿತಿ ಸದಸ್ಯ ಪ್ರಕಾಶ್ ವೇದಿಕೆಯಲ್ಲಿದ್ದರು.
ಸನ್ಮಾನ: ಪದವಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದ ಎಚ್.ಎನ್.ಚೈತ್ರಾ, ಪ್ರಿಯಾ ಹಾಗೂ ಪೂಜಾ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.