ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಹೇರಲಾಗಿರುವ ವಾರಾಂತ್ಯ ಕರ್ಪ್ಯೂ ಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಅವಶ್ಯ ವಸ್ತುಗಳ ಖರೀದಿಗೆ ಶನಿವಾರ ಬೆಳಗ್ಗೆ 6 ಗಂಟೆಯಿಂದ 10 ರ ತನಕ ಅವಕಾಶ ಕಲ್ಪಿಸಲಾಗಿತ್ತು. ಹಾಲು, ತರಕಾರಿ, ಹಣ್ಣು, ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಸಾರ್ವಜನಿಕರು ಕೆಲವು ಕಡೆ ಮುಗಿ ಬಿದ್ದರು. ಆ ಬಳಿಕ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ.
ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ತುರ್ತು ವಾಹನಗಳು ಮಾತ್ರ ಓಡಾಡುತ್ತಿವೆ. ಪೊಲೀಸರು ಅಲ್ಲಲ್ಲಿ ಚೆಕ್ ಪೋಸ್ಟ್ ತೆರೆದು ವಾಹನ ತಪಾಸಣೆ ನಡೆಸುತ್ತಿದ್ದಾರೆ.
ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಕಡಬ ಮೊದಲಾದ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆ ತನಕ ಅವಶ್ಯ ವಸ್ತುಗಳ ಅಂಗಡಿಗಳು ತೆರೆದಿದ್ದವು. ಆದರೆ ಜನರ ಓಡಾಟ ಬೆಳಗ್ಗೆಯಿಂದಲೇ ಕಡಿಮೆ ಇತ್ತು.