ದಾವಣಗೆರೆ: ಭಾರತ ಸ್ವಾತಂತ್ರೃ ಅಮೃತಮಹೋತ್ಸವ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭೆವಾರು 75 ಕಿಮೀ ಪಾದಯಾತ್ರೆ ನಡೆಯಲಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಆ.1ರಿಂದ 10ರವರೆಗೆ ಹಾಗೂ 12, 13ರಂದು ದಾವಣಗೆರೆಯಲ್ಲಿ ಯಾತ್ರೆ ನಡೆಸಲಾಗುವುದು ಕೆಪಿಸಿಸಿ ಉಪಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಎಂ.ಸಿ.ವೇಣುಗೋಪಾಲ್ ಹೇಳಿದರು.
ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾವ್ಯಾಪಿ ಚಿಂತನ ಶಿಬಿರಗಳ ಮೂಲಕ, ಅಭ್ಯರ್ಥಿಗಳು ಮತದಾರರೊಂದಿಗೆ ಹೊಂದಿರುವ ಸಂಬಂಧ, ಕಾರ್ಯವೈಖರಿ ಕುರಿತಂತೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಜು.27ರಂದು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ಚಿಂತನಾ ಶಿಬಿರ ನಡೆಯಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಎಂ.ಸಿ.ವೇಣುಗೋಪಾಲ್ ಹೇಳಿದರು.
ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಕಾಂಗ್ರೆಸ್ ಪಕ್ಷದ ಕಣ್ಣುಗಳು. ಸಿಎಂ ಅಭ್ಯರ್ಥಿ ಬಗ್ಗೆ ಶಾಸಕಾಂಗ ಪಕ್ಷ ನಿರ್ಧರಿಸಲಿದೆ. ಬಿಜೆಪಿ ಪಕ್ಷ ಸಂಘಟನೆಗೆ ಕಾರಣರಾದ ಆದ್ವಾನಿ ಹಾಗೂ ಬಿಎಸ್ವೈ ಅವರನ್ನು ಮೂಲೆಗುಂಪು ಮಾಡಲಾಗಿದೆ. ಬಿಜೆಪಿಯಲ್ಲಿ ಮಾತ್ರ ಮುಖಂಡರನ್ನು ಯೂಸ್ ಆ್ಯಂಡ್ ಥ್ರೋ ರೀತಿ ಬಳಸಲಾಗುತ್ತಿದೆ. ಕಾಂಗ್ರೆಸ್ನಲ್ಲಿ ಈ ಸ್ಥಿತಿ ಇಲ್ಲ ಎಂದು ಸಮರ್ಥಿಸಿಕೊಂಡರು.
ಕಾಂಗ್ರೆಸ್ನ ಅಧಿನಾಯಕಿ ಸೋನಿಯಾಗಾಂಧಿ ಅವರು ಶುಕ್ರವಾರ ಇಡಿ ವಿಚಾರಣೆಗೆ ಒಳಪಡಲಿದ್ದು, ಇಡಿ ದುರುಪಯೋಗ ಖಂಡಿಸಿ ಪಕ್ಷದ ಕರೆ ಮೇರೆಗೆ ಪ್ರತಿಭಟನೆ ನಡೆಸಲಾಗುತ್ತಿದೆ. ದಾವಣಗೆರೆಯ ಅಂಬೇಡ್ಕರ್ ವೃತ್ತದಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಮಾಜಿ ಸಚಿವ ಎಸ್ಎಸ್ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಭಾಗವಹಿಸುವರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗಡಿಗುಡಾಳ್ ಮಂಜುನಾಥ್, ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಕೆ.ಎಸ್.ಬಸವಂತಪ್ಪ, ಎಸ್. ಮಲ್ಲಿಕಾರ್ಜುನ. ಎ. ನಾಗರಾಜ್ ಇದ್ದರು