ಶಿವರಾಜ್ ವಾಲಿ ಚಿಂಚೋಳಿ
ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಅತಿ ಹೆಚ್ಚು ಮಾನವ ದಿನಗಳನ್ನು ಸೃಷ್ಟಿಸುವ ಮೂಲಕ ತಾಲೂಕು ಇಡೀ ಜಿಲ್ಲೆಯಲ್ಲಿ ಮಾದರಿಯಾಗಿದೆ. ಈ ಮೂಲಕ ಸಾಧನೆಯತ್ತ ದಾಪುಗಾಲು ಹಾಕುತ್ತಿದೆ.
ಲಾಕ್ಡೌನ್ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳಿಂದ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇದುವರೆಗೆ ಒಟ್ಟು 11, 000 ಕೂಲಿ ಕಾರ್ಮಿಕರಿಗೆ 33,130 ಮಾನವ ದಿನಗಳನ್ನು ಸೃಷ್ಟಿಸುವ ಮೂಲಕ ದಾಖಲೆ ಪ್ರಮಾಣದಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ.
ತಾಲೂಕಿನಲ್ಲಿ 45,150ಕ್ಕೂ ಅಧಿಕ ಜಾಬ್ ಕಾರ್ಡ್ಗಳನ್ನು ವಿತರಿಸಲಾಗಿದ್ದು, 70 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು ನರೇಗಾ ಯೋಜನೆಯಡಿ ಉದ್ಯೋಗ ಪಡೆಯಲು ಅರ್ಹತೆ ಹೊಂದಿದ್ದಾರೆ. ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಕೆರೆ ಮತ್ತು ಹಳ್ಳಗಳ ಹೂಳೆತ್ತುವುದು, ನಾಲಾಗಳ ಸ್ವಚ್ಛತೆ, ರೈತರ ಜಮೀನುಗಳಲ್ಲಿ ಬದು (ಒಡ್ಡು) ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟಿನಲ್ಲಿ ಇಡೀ ಜಿಲ್ಲೆಯಲ್ಲಿಯೇ ತಾಲೂಕಿನಾದ್ಯಂತ ಅಚ್ಚುಕಟ್ಟಾಗಿ ಉದ್ಯೋಗ ಖಾತ್ರಿ ಯೋಜನೆ ನಡೆಯುತ್ತಿದ್ದು, ಸಾಕಷ್ಟು ಕಾರ್ಮಿಕರು ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ ಉತ್ತಮ ಜೀವನ ನಡೆಸುತ್ತಿದ್ದಾರೆ.
ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿ ವಿವಿಧ ರಾಜ್ಯಗಳಿಂದ ಸಾಕಷ್ಟು ಕಾರ್ಮಿಕರು ಸ್ವಗ್ರಾಮಗಳಿಗೆ ವಾಪಸ್ ಬರುತ್ತಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವಧಿ ಮುಗಿದ ನಂತರ ಆರೋಗ್ಯ ತಪಾಸಣೆ ನಡೆಸಿ ಖಾತ್ರಿಯಡಿ ಕೆಲಸ ನೀಡಲಾಗುವುದು. ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು, ಕಾರ್ಡ್ ಕೊಟ್ಟು ಉದ್ಯೋಗ ನೀಡಲಾಗುತ್ತದೆ.
| ಶಂಕರ ರಾಠೋಡ್, ಯೋಜನಾಧಿಕಾರಿ, ತಾಲೂಕು ಪಂಚಾಯಿತಿ, ಚಿಂಚೋಳಿ