ದಾವಣಗೆರೆ: ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ, ಒಪಿಎಸ್ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವೋಟ್ ಫಾರ್ ಒಪಿಎಸ್ ಅಭಿಯಾನ ಶೀರ್ಷಿಕೆಯಡಿ ಡಿ.19ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ಅಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳುವ ಉದ್ದೇಶದಿಂದ ಈ ಧರಣಿ ಆಯೋಜಿಸಲಾಗಿದೆ. ಜಿಲ್ಲೆಯಿಂದ 400 ಮಂದಿ ನೌಕರರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಜೆ.ಬಿ.ಶಿವಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಂಜಾಬ್, ರಾಜಸ್ತಾನ, ಛತ್ತೀಸ್ಗಡ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯೇ ಜಾರಿಯಲ್ಲಿದೆ. ಹಿಮಾಚಲಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಎನ್ಪಿಎಸ್ ರದ್ದತಿಗೆ ಆಶ್ವಾಸನೆ ನೀಡಿದ ರಾಷ್ಟ್ರೀಯ ಪಕ್ಷಕ್ಕೆ ಸರ್ಕಾರಿ ನೌಕರರು, ಅವರ ಕುಟುಂಬ ವರ್ಗದವರು ಬೆಂಬಲಿಸಿದ್ದು ಅದೇ ಪಕ್ಷ ಅಧಿಕಾರಕ್ಕೆ ಬಂದಿದೆ.
ಹೀಗಾಗಿ ಕರ್ನಾಟಕದಲ್ಲೂ ನಮ್ಮ ಬೇಡಿಕೆಗೆ ಸ್ಪಂದಿಸುವ ಪಕ್ಷಕ್ಕೆ ಬೆಂಬಲಿಸುವ ಬಗ್ಗೆ ತೀರ್ಮಾನಿಸಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜಕೀಯ ಮುಖಂಡರಿಗೂ ಈ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದರು.
ಹಳೆಯ ಪಿಂಚಣಿ ಯೋಜನೆ ಜಾರಿಗೆ ಎಲ್ಲ ಜಿಲ್ಲೆಯಲ್ಲೂ ಅನೇಕ ರೀತಿಯ ಹೋರಾಟ ನಡೆಸಲಾಗಿದೆ. ಹೊಸ ಪಿಂಚಣಿ ಯೋಜನೆಯಡಿ ನೌಕರರಿಗೆ ನಿವೃತ್ತಿ ಬಳಿಕ ಜೀವನಕ್ಕೆ ಭದ್ರತೆ ನೀಡುವಷ್ಟು ಆರ್ಥಿಕ ನೆರವು ಸಿಗುವುದಿಲ್ಲ. ಡಿ.18ರಂದು 6 ಬಸ್ಗಳಲ್ಲಿ ಜಿಲ್ಲೆಯ ನೌಕರರು ಹೋರಾಟ ಹಿನ್ನೆಲೆಯಲ್ಲಿ ಬೆಂಗಳೂರು ತೆರಳುವರು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಮೋಹನ, ತ್ರಿವೇಣಿ, ಪುನೀತ್, ಮಲ್ಲಿಕಾರ್ಜುನ ಇದ್ದರು.