ಬೆಂಗಳೂರು ಗ್ರಾಮಾಂತರ: ಕರೊನಾ ಎರಡನೇ ಅಲೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಇದರ ಮಧ್ಯೆ ಮೂರನೇ ಅಲೆ ಬಗ್ಗೆ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಕರೊನಾ ನಿಯಮ ನಿರ್ಲಕ್ಷ್ಯ ಮಾಡಿದರೆ ಅಪಾಯ ಎದುರಿಸಬೇಕಾಗುತ್ತದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಎಚ್ಚರಿಕೆ ನೀಡಿದರು.
ಹೊಸಕೋಟೆ ತಾಲೂಕು ಚೊಕ್ಕಹಳ್ಳಿ ಪಂಚಾಯಿತಿಯಲ್ಲಿ ಬುಧವಾರ ಎಂಟಿಬಿ ಚಾರಿಟಬಲ್ ಟ್ರಸ್ಟ್ನಿಂದ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕರೊನಾ ಮಾಹಾಮಾರಿಯನ್ನು ನಿಯಂತ್ರಣ ಮಾಡಲು ಲಸಿಕಾ ಪರಿಣಾಮಕಾರಿಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಪಂಚಾಯಿತಿ ವ್ಯಾಪ್ತಿಯಲ್ಲಿ ಎಂಟಿಬಿ ಚಾರಿಟಬಲ್ ಟ್ರಸ್ಟ್ನಿಂದ ಉಚಿತವಾಗಿ ಲಸಿಕೆ ನೀಡುವ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ರಕ್ಷಣೆ ಪಡೆಯಬೇಕು. ಲಸಿಕೆ ಬಗ್ಗೆ ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಸಾರ್ವಜನಿಕರು ಕರೊನಾ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದು ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಕೇರಳ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಡೆಲ್ಟಾ ವೈರಸ್ ಸೋಂಕು ಹೆಚ್ಚಳವಾಗಿದೆ.
ಸಂಪೂರ್ಣವಾಗಿ ಎರಡನೇ ಅಲೆ ಹೋಗಿಲ್ಲ. ಅನ್ಲಾಕ್ ಮಾಡಿರುವುದನ್ನು ತಪ್ಪಾಗಿ ಅರ್ಥೈಸಿಕೊಂಡು ನಿರ್ಲಕ್ಷ್ಯ ವಹಿಸಿದರೆ ಅಪಾಯ ಎದುರಿಸಬೇಕಾಗುತ್ತದೆ ಎಂದರು.
ಈಗಾಗಲೇ ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದೆ. ಕರೊನಾ ನಿಯಂತ್ರಣಕ್ಕೆ ಸಾರ್ವಜನಿಕರು ಸರ್ಕಾರದ ಕ್ರಮಗಳಿಗೆ ಕೈಜೋಡಿಸಬೇಕು. ಇಲ್ಲವಾದರೆ ನಿಯಂತ್ರಣ ಅಸಾಧ್ಯ ಎಂದು ಹೇಳಿದರು.
ಕರೊನಾ ಮಹಾಮಾರಿ ಸಾಕಷ್ಟು ಜನರ ಬಲಿದಾನ ಪಡೆದಿದೆ. ವ್ಯಾಕ್ಸಿನ್ ಮೂಲಕ ಮಾರಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಲಾಗುತ್ತಿದೆ. ಖಾಸಗಿಯಲ್ಲಿ ವ್ಯಾಕ್ಸನ್ಗೆ ಸಾವಿರಾರು ರೂಪಾಯಿ ತೆರಬೇಕಿದೆ. ಕರೊನಾ ಲಾಕ್ಡೌನ್ ತೆರವಾಗಿದ್ದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲು ಸಾಕಷ್ಟು ಸಮಯಾವಕಾಶ ಬೇಕಿದೆ ಎಂದು ಹೇಳಿದರು.
ಸಾಮಾನ್ಯ ಜನರು ಜೀವನ ನಡೆಸುವುದೇ ಕಷ್ಟ ವಾಗಿದೆ. ಈ ಹಿನ್ನೆಲೆಯಲ್ಲಿ ಹೊಸಕೋಟೆ ತಾಲೂಕಿನಲ್ಲಿ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.