ಚಾಮರಾಜನಗರ: ಏಳನೇ ವೇತನ ಆಯೋಗ ವರದಿ ಜಾರಿ, ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಹಮ್ಮಿಕೊಂಡಿದ್ದ ಮುಷ್ಕರಕ್ಕೆ ತಾಲೂಕಿನಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಯಳಂದೂರು ಪಟ್ಟಣದ ಮಿನಿವಿಧಾನಸೌಧ, ತಾಲೂಕು, ಪಟ್ಟಣ ಪಂಚಾಯಿತಿ, ತಾಲೂಕು ಆಸ್ಪತ್ರೆ ಸೇರಿದಂತೆ ಬಹುತೇಕ ಎಲ್ಲ ಕಚೇರಿಗಳು ಸರ್ಕಾರಿ ಶಾಲಾ, ಕಾಲೇಜುಗಳಿಗೆ ನೌಕರರು ಗೈರಾಗುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಸರ್ಕಾರಿ ಕಚೇರಿಗಳು ಬಾಗಿಲು ತೆರೆದಿದ್ದರೂ ನೌಕರರು ಬಾರದೆ ಇದ್ದರಿಂದ ಬಿಕೋ ಎನ್ನುತ್ತಿದ್ದವು, ಮಧ್ಯಾಹ್ನದ ನಂತರ ಬಹುತೇಕ ಕಚೇರಿಗಳಿಗೆ ಬೀಗ ಹಾಕಲಾಗಿತ್ತು. ಮುಷ್ಕರದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲದ ಕಾರಣ ಅನೇಕರು ಕಚೇರಿ ಕೆಲಸಕ್ಕೆ ಬಂದು ಬರಿಗೈಯಲ್ಲಿ ವಾಪಸ್ಸಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೆ ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದ್ದರಿಂದ ಹೊರ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಖಾಸಗಿ ಆಸ್ಪತ್ರೆಗಳತ್ತ ಕೆಲವರು ಚಿಕಿತ್ಸೆಗೆ ಮುಖ ಮಾಡುವ ದೃಶ್ಯ ಅಲ್ಲಲ್ಲಿ ಕಾಣಸಿಕ್ಕಿತು. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಇದಕ್ಕೆ ಬೆಂಬಲ ಸೂಚಿಸಿದ್ದರಿಂದ ಬಹುತೇಕ ಎಲ್ಲ ಶಾಲಾ, ಕಾಲೇಜುಗಳು ಬಂದ್ ಆಗಿದ್ದವು.